ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರೀ ಬಿಗು ಬಂದೋಬಸ್ತ್ ನಡುವೆಯೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೆರಳಲಿದ್ದ ಮೈಸೂರಿನ ರಸ್ತೆಯಲ್ಲಿ ಕಾರೊಂದು ಅಪಘಾತಕ್ಕೀಡಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಅಮಿತ್ ಶಾ ತೆರಳುವುದಕ್ಕೂ ಮುನ್ನ ಈ ಘಟನೆ ನಡೆದಿದ್ದು, ಪೊಲೀಸರ ಸಕಾಲಿಕ ಕ್ರಮದಿಂದಾಗಿ ಪರಿಸ್ಥಿತಿ ತಿಳಿಯಾಗಿದೆ.
ಮೈಸೂರು-ನಂಜನಗೂಡು ರಸ್ತೆಯಲ್ಲಿ ಶಾ ತೆರಳುವವರಿದ್ದು, ಇದಕ್ಕೂ ಮೊದಲು ಈ ದಾರಿಯಲ್ಲಿ ಸಾಗುತ್ತಿದ್ದ ಕಾರೊಂದು ರಸ್ತೆ ಮಧ್ಯೆ ಹಾಕಲಾಗಿದ್ದ ಬ್ಯಾರಿಕೇಡ್ಗೆ ನಿಯಂತ್ರಣ ತಪ್ಪಿ ಡಿಕ್ಕಿಯಾಗಿತ್ತು. ಇದರಲ್ಲಿ ಕಾರಿನಲ್ಲಿದ್ದವರಿಗೆ ಗಾಯಗಳಾಗಿತ್ತು. ತಕ್ಷಣ ಪೊಲೀಸರು ಆಂಬುಲೆನ್ಸ್ ತರಿಸಿ ಗಾಯಾಳುವನ್ನು ಆಸ್ಪತ್ರೆಗೆ ಕರದೊಯ್ದಿದ್ದು, ಅಪಘಾತಕ್ಕೀಡಾಗಿದ್ದ ಕಾರನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.