August 18, 2026
Tuesday, August 18, 2026
spot_img

ವಾಲ್ಮೀಕಿ ನಿಗಮದ ಹಣ ದುರುಪಯೋಗ ಆರೋಪ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಅಹೋರಾತ್ರಿ ಧರಣಿ ಮುಂದುವರಿಕೆ

ಹೊಸದಿಗಂತ ವರದಿ ಬೆಳಗಾವಿ:

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿತು.

ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಧರಣಿಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಜಗದೀಶ್ ಶೆಟ್ಟರ್ ಮಾತನಾಡಿ, “ಭ್ರಷ್ಟಾಚಾರದ ಬಗ್ಗೆ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಕೆ.ಎನ್. ರಾಜಣ್ಣ ಅವರ ಸಚಿವ ಸ್ಥಾನವನ್ನು ಕಿತ್ತುಕೊಂಡಿದ್ದೀರಿ. ಅದೇ ಸಮಾಜದ ಬಡವರ ಕೋಟಿ ಕೋಟಿ ಹಣ ಲೂಟಿ ಮಾಡಿದ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡಿದ್ದೀರಲ್ಲ, ನಾಚಿಕೆಯಾಗುವುದಿಲ್ಲವೇ?” ಎಂದು ಪ್ರಶ್ನಿಸಿದರು.

ಕೂಡಲೇ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಈ ಹೋರಾಟವನ್ನು ಹಳ್ಳಿ ಹಳ್ಳಿಗೂ ಕೊಂಡೊಯ್ಯಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ:

ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯಾರೇ ಭ್ರಷ್ಟಾಚಾರ ಮಾಡಿದರೂ ಸಹಿಸುವುದಿಲ್ಲ, ಲಂಚ ಪಡೆಯುವುದನ್ನು ಸಹಿಸುವುದಿಲ್ಲ ಎಂದು ಹೇಳಿದ್ದರು. ಅದು ಕೇವಲ ತೋರಿಕೆಗಾಗಿ ನೀಡಿದ ಹೇಳಿಕೆಯೇ ಎಂದು ಪ್ರಶ್ನಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗದ ಆರೋಪ ಗಂಭೀರವಾಗಿದ್ದು, ಪ್ರಕರಣದ ಸಂಪೂರ್ಣ ಸತ್ಯವನ್ನು ಜನತೆಯ ಮುಂದಿಡಬೇಕು. ಆರೋಪದ ಹಿನ್ನೆಲೆಯಲ್ಲಿ ಸಚಿವರು ತಮ್ಮ ಸ್ಥಾನದಲ್ಲಿ ಮುಂದುವರಿಯುವುದು ಸರಿಯಲ್ಲ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪಾರದರ್ಶಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಾಜಿ ಶಾಸಕ ಸಂಜಯ ಪಾಟೀಲ, ಮಹಾನಗರ ಅಧ್ಯಕ್ಷೆ ಗೀತಾ ಸುತಾರ, ಬಸವರಾಜ ಹುಂದ್ರಿ, ನಿತಿನ್ ಚೌಗಲೆ, ಡಾ. ಸೋನಾಲಿ ಸರ್ನೋಬತ್, ಸಿ.ಬಿ. ಪಾಟೀಲ, ಈರಣ್ಣ ಅಂಗಡಿ, ಯುವರಾಜ್ ಜಾಧವ್, ಚೇತನ್ ಅಂಗಡಿ, ಶ್ರೀಶೈಲ ಯಮಕನಮರಡಿ, ಕೆ.ವಿ. ಪಾಟೀಲ, ವಿಜಯ ಗುಡದೇರಿ, ಪ್ರಶಾಂತ್ ಅಮ್ಮಿನಭಾವಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !