ಹೊಸದಿಗಂತ ವರದಿ ಮಡಿಕೇರಿ:
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗಮಂಡಲದ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ವಿಶಿಷ್ಟ ಸಾಧನೆ ಮಾಡಿದ್ದಾರೆ.
ಕೂಡಿಗೆಯ ಕ್ರೀಡಾ ವಸತಿ ಶಾಲೆಯಲ್ಲಿ ನ.2ರಂದು ನಡೆದ ಅಥ್ಲೆಟಿಕ್ಸ್ ಕೂಟದಲ್ಲಿ 10ನೇ ತರಗತಿಯ ಡಿಂಪಲ್ ಕೆ. ಜಿ. 1500ಮೀ ಓಟದಲ್ಲಿ ಪ್ರಥಮ ಸ್ಥಾನ ಮತ್ತು 3000ಮೀ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 5000ಮೀ ವೇಗದ ನಡಿಗೆ ಸ್ಪರ್ಧೆಯಲ್ಲಿ 10ನೇ ತರಗತಿಯ ಪೂರ್ವಿಕ್ ಕೆ. ಎ. ಪ್ರಥಮ ಮತ್ತು 9ನೇ ತರಗತಿಯ ಚಂದ್ರಕಾಂತ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು 9ನೇ ತರಗತಿಯ ರಕ್ಷಿತ್ ಎನ್ ಡಿ ಮತ್ತು ಹವಿನ್ ಕೆ .ಜೆ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲ ಕೆ.ಜೆ.ದಿವಾಕರ, ಹಿರಿಯ ಸಹಶಿಕ್ಷಕ ಜೆ.ಕೃಷ್ಣ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಎನ್.ಬಿ.ಲೋಕನಾಥ್ ಅವರುಗಳು ಅಭಿನಂದಿಸಿದ್ದಾರೆ.