ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು ವಿಲ್ದಾಣದ ಮೂಲಕ ಹಾದುಹೋದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಣ್ಗಾವಲು ಇನ್ನಷ್ಟು ಹೆಚ್ಚಿಸಲಾಗಿದೆ.
ಈ ನಡುವೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅಧ್ಯಕ್ಷತೆಯಲ್ಲಿ ಮಂಕಿಪಾಕ್ಸ್ ಹರಡದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿಮಾನ ನಿಲ್ದಾಣದಲ್ಲಿ ಸಭೆ ನಡೆಸಲಾಯಿತು. ಹೆಚ್ಚಿನ ಕೇರಳ ಪ್ರಯಾಣಿಕರು ಮಂಗಳೂರಿನ ವಿಮಾನ ನಿಲ್ದಾಣದಿಂದ ಕೇರಳಕ್ಕೆ ರಸ್ತೆ ಮಾರ್ಗವಾಗಿ ಸಂಚರಿಸುತ್ತಿದ್ದಾರೆ. ಹಾಗಾಗಿ ವಿಮಾನದಿಂದ ಬಂದಿಳಿಯುತ್ತಿದ್ದಂತೆಯೇ ರೋಗ ಲಕ್ಷಣಗಳಿವೆಯೇ ಎಂಬ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ವಿಮಾನ ಲ್ಯಾಂಡಿಂಗ್ ಆಗುವ ಮೊದಲೇ ವಿಮಾನದಲ್ಲಿ ಜ್ವರ ಹಾಗೂ ಚರ್ಮದ ಗುಳ್ಳೆಗಳು ಬರುವರನ್ನು ಪತ್ತೆ ಹಚ್ಚಬೇಕು. ಲಕ್ಷಣಗಳು ಕಂಡುಬಂದರೆ ಅವರನ್ನು ಪ್ರತ್ಯೇಕಿಸಿ ಪರೀಕ್ಷೆಗೊಳಪಡಿಸಬೇಕು. ಸಂಶಯ ಕಂಡುಬಂದರೆ ವಿಮಾನ ನಿಲ್ದಾಣದಿಂದ ನೇರವಾಗಿ ವೆನ್ಲಾಕ್ ಆಸ್ಪತ್ರೆಗೆ ಐಸೋಲೇಷನ್ ಗೆ ದಾಖಲಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.