ಹೊಸದಿಗಂತ ವರದಿ, ಕಲಬುರಗಿ:
ಮಾರ್ಚ್ 16ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲು ಕಲಬುರಗಿ ನಗರಕ್ಕೆ ಆಗಮಿಸಲಿದ್ದಾರೆ ಎಂದು ಕಲಬುರಗಿ ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ ಹೇಳಿದರು.
ಸೋಮವಾರ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಲೋಕಸಭಾ ಚುನಾವಣೆ ಹಿನ್ನಲೆ ಕಲಬುರಗಿ ನಗರ, ಗ್ರಾಮೀಣ ಹಾಗೂ ಬೀದರ್ ಜಿಲ್ಲೆಯ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದ ಅವರು, ಕಲಬುರಗಿ ಹಾಗೂ ಬೀದರ್ ಜಿಲ್ಲೆಯ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಲಬುರಗಿ ಸಂಸದ ಡಾಕ್ಟರ್ ಉಮೇಶ್ ಜಾಧವ್, ಮಂಗಳವಾರ ಮಾರ್ಚ್ ೧೨ರಂದು ಪ್ರಧಾನಿ ಮೋದಿ ಅವರು ಕಲಬುರಗಿ ರೈಲು ನಿಲ್ದಾಣದಲ್ಲಿ ವರ್ಚುವಲ್ ಮೂಲಕ ವಂದೇ ಭಾರತ ರೈಲಿಗೆ ಚಾಲನೆ ನೀಡಲಿದ್ದಾರೆ. ಜಿಲ್ಲೆಯ ಇತಿಹಾಸದಲ್ಲೇ ಮಂಗಳವಾರ ಸುವರ್ಣಾಕ್ಷರಗಳಿಂದ ಬರೆಯುವಂತ ದಿನವಾಗಿದ್ದು, ಮಂಗಳವಾರ ಬೆಳಗ್ಗೆ 9.15 ನಿಮಿಷಕ್ಕೆ ವಂದೇ ಭಾರತ ರೈಲಿಗೆ ಚಾಲನೆ ನೀಡಲಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಬೆಳಗ್ಗೆ 8 ಗಂಟೆಗೆ ಕಲಬುರಗಿ ರೈಲು ನಿಲ್ದಾಣಕ್ಕೆ ಆಗಮಿಸಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಬೇಕು ಎಂದು ಮನವಿ ಮಾಡಿದರು.
ಇದಲ್ಲದೇ, ನಂದೂರು ಸ್ಟೇಷನ್ ಬಳಿಯ ಗತಿ ಶಕ್ತಿ ಕಾರ್ಗೋ ಟರ್ಮಿನಲ್ ಸಹ ಇದೆ ವೇಳೆ ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದ್ದು, ಕಲಬುರಗಿ ಜಿಲ್ಲೆಯ ಹೆಮ್ಮೆಯ ಕ್ಷಣ ವಂದೇ ಭಾರತ ರೈಲು ಚಾಲನೆ ಆಗಿದೆ. ನಾವೆಲ್ಲರೂ ಹಬ್ಬದ ರೀತಿಯಲ್ಲಿ ಇದನ್ನು ಸಂಭ್ರಮಿಸೋಣ. ಹೀಗಾಗಿ ಪಕ್ಷಾತೀತವಾಗಿ ಎಲ್ಲಾ ರಾಜಕೀಯ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಬಸವರಾಜ್ ಮತ್ತಿಮಡು, ನಗರಾಧ್ಯಕ್ಷ ಚಂದು ಪಾಟೀಲ್, ಪ್ರಧಾನ ಕಾರ್ಯದರ್ಶಿ ಉಮೇಶ್ ಪಾಟೀಲ್, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್, ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್, ಮಾಜಿ ಎಂಎಲ್ಸಿ ಅಮರನಾಥ ಪಾಟೀಲ್, ಸಂತೋಷ ಹಾದಿಮನಿ, ಅಶೋಕ್ ಬಗಲಿ ಉಪಸ್ಥಿತರಿದ್ದರು.