ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ ವುಡ್ ನಲ್ಲಿ ನಟ ಡಾ.ರಾಜ್ಕುಮಾರ್ ಅವರ ಸ್ಮಾರಕ ಕುರಿತು ಶುರುವಾದ ಮಾತಿನ ಸಮರ ಮಿತಿ ಮೀರಿದ್ದು, ಸಾರಾ ಗೋವಿಂದು ವಿರುದ್ಧ ನಟ ಚೇತನ್ ಅಹಿಂಸಾ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಕೆಲವು ದಿನಗಳ ಹಿಂದೆ ಚೇತನ್ ಅಹಿಂಸಾ, ಡಾ. ರಾಜ್ಕುಮಾರ್ ಅವರ ಸ್ಮಾರಕದ ಜಾಗಕ್ಕೆ ಸಂಬಂಧಿಸಿದಂತೆ ನೀಡಿದ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬೆನ್ನಲ್ಲೇ ಸಾರಾ ಗೋವಿಂದು ಅವರ ನೇತೃತ್ವದಲ್ಲಿ ಅಣ್ಣಾವ್ರ ಅಭಿಮಾನಿಗಳು ಚೇತನ್ ಮನೆಗೆ ಮುತ್ತಿಗೆ ಹಾಕಿದ್ದರು.ಇದೀಗ ತನ್ನ ಮನೆಗೆ ಮುತ್ತಿಗೆ ಹಾಕಿದವರ ವಿರುದ್ಧ ನಟ ಚೇತನ್ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.
ಈ ಸಂಬಂಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಸಾರಾ ಗೋವಿಂದ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ.
ಬಳಿಕ ಮಾತನಾಡಿದ ನಟ ಚೇತನ್, ಕಳೆದ ಶನಿವಾರ ಸಾ.ರಾ ಗೋವಿಂದು ಮನೆ ಬಳಿ ಬಂದ ಅವಾಚ್ಯ ಶಬ್ದಗಳನ್ನು ಬಳಸಿ, ಬೆದರಿಕೆ ಹಾಕಿದ್ದಾರೆ. ಈ ರೀತಿ ಹಿಂದೆಯೂ ಮಾಡಿದ್ದರು. ಲಂಕೇಶ್ ಪತ್ರಿಕೆಯ ಕಚೇರಿಯ ಮೇಲೆ ದಾಳಿ ನಡೆಸಿದ್ದರು. ಮಹಿಳಾ ಪತ್ರಕರ್ತೆಯ ಮೇಲೆ ಹಲ್ಲೆ ಮಾಡಿದ ಆರೋಪಗಳು ಅವರ ವಿರುದ್ಧ ಕೇಳಿಬಂದಿವೆ. ಜೊತೆಗೆ ಹಲವು ಗಂಭೀರ ಆರೋಪಗಳು ಅವರ ಮೇಲೆ ಇದೆ ಎಂದು ಆರೋಪಿಸಿದರು.
ಡಾ. ರಾಜ್ ಕುಮಾರ್ ಅವರ ಅಭಿಮಾನಿ ಎಂದು ಹೇಳುವ ಮೂಲಕ ಅವರು ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಲಾಗುತ್ತಿದೆ. ಸಿನಿಮಾ ರಂಗದ ಬೆಳವಣಿಗೆಗೆ ಅಡ್ಡಿಯಾಗುವ ಕೆಲಸಗಳು ನಡೆಯುತ್ತಿವೆ ಆರೋಪಿಸಿದ್ದಾರೆ.



