ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಉಪೇಂದ್ರ ಮೇಲೆ ಎರಡು ಕಡೆ ಎಫ್.ಐ.ಆರ್. ದಾಖಲಾಗಿದ್ದು, ಅದನ್ನು ರದ್ದು ಮಾಡಬೇಕೆಂದು ಕೋರಿ ನಟ ಉಪೇಂದ್ರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ನಾನು ಆಡಿರುವ ಮಾತುಗಳಿಗೆ ಕ್ಷಮೆ ಕೇಳಿದ್ದೇನೆ, ಮಾತನಾಡುವಾಗಲು ಒಂದು ಸಮುದಾಯದ ಜನರಿಗೆ ನೋವು ಮಾಡುವ ಉದ್ದೇಶ ನನ್ನದಾಗಿರಲಿಲ್ಲ. ಆದರೆ ತಕ್ಷಣವೇ ಕ್ಷಮೆ ಕೇಳಿದ್ದೇನೆ, ವಿಡಿಯೋ ಡಿಲೀಟ್ ಮಾಡಿದ್ದೇನೆ. ಆದರೂ ನನ್ನ ಮೇಲೆ ದ್ವೇಷ ಸಾಧಿಸಲಾಗುತ್ತಿದೆ ಎಂದಿದ್ದಾರೆ.
ರಾಜ್ಯದ ನಾನಾ ಕಡೆ ನಟ ಉಪೇಂದ್ರ ವಿರುದ್ಧ ದೂರು ದಾಖಲಾಗುತ್ತಿದ್ದು, ಅಲ್ಲಲ್ಲಿ ಪ್ರತಿಭಟನೆಯೂ ನಡೆಯುತ್ತಿದೆ. ಬೆಂಗಳೂರಿನ ಚೆನ್ನಮ್ಮನ ಅಚ್ಚುಕಟ್ಟು ಪ್ರದೇಶ ಪೊಲೀಸರು ಉಪೇಂದ್ರ ಅವರಿಗೆ ನೊಟೀಸ್ ನೀಡಿದ್ದಾರೆ. ಉಪೇಂದ್ರ ಫೋನ್ ಸ್ವಿಚ್ ಆಫ್ ಆಗಿದ್ದು, ಅವರಿಗಾಗಿ ಶೋಧ ನಡೆಯುತ್ತಿದೆ ಎನ್ನಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಮಾತನಾಡುವಾಗ ಹೇಳಿದ ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂಬ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಒಂದು ಜಾತಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ನಟ ಉಪೇಂದ್ರನ ವಿರುದ್ಧ ಬೆಂಗಳೂರಿನ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.