ಹೊಸದಿಗಂತ ವರದಿ ಶಿವಮೊಗ್ಗ :
ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಕ್ಷೇತ್ರದಲ್ಲಿ ಬಂಡಾಯ ಬುಗಿಲೆದ್ದಿದ್ದು, ಬಂಡಾಯ ಭೀತಿ ಎದುರಾಗಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಬೆಂಬಲಿಗರು ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಬೀಗ ಜಡಿದು ಭಾನುವಾರ ಪ್ರತಿಭಟನೆ ನಡೆಸಿದರು. ನಗರ ಕ್ಷೇತ್ರಕ್ಕೆ ಸುಂದರೇಶ್ ಅವರಿಗೆ ಟಿಕೆಟ್ ನೀಡಬೇಕು. ಇಲ್ಲದಿದ್ದರೆ ಬಂಡಾಯ ಸ್ಪರ್ಧೆ ಮಾಡುವುದಾಗಿ ಬೆಂಬಲಿಗರು ಎಚ್ಚರಿಸಿದರು.
ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಬೆಂಬಲಿಗರು ಅವರ ಮನೆಯಲ್ಲಿಯೇ ಪ್ರತಿಭಟನೆ ನಡೆಸಿ ಪಕ್ಷದ ವರಿಷ್ಠರ ನಿರ್ಧಾರ ಬದಲಿಸಬೇಕು. ಈಗಾಗಲೇ ಶಾಸಕಾಗಿ ಅನುಭವ ಇರುವ ಕೆ.ಬಿ. ಪ್ರಸನ್ನಕುಮಾರ್ ಅವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದರು.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಕಾಂಗ್ರೆಸ್ ನ ಪ್ರಬಲ ಆಕಾಂಕ್ಷಿಯಾಗಿದ್ದ ವಿ. ನಾರಾಯಣ ಸ್ವಾಮಿ ಮನೆಯಲ್ಲಿಯೇ ಬೆಂಬಲಿಗರ ಸಭೆ ನಡೆಸಿ ಬಂಡಾಯ ಸ್ಪರ್ಧೆ ಮಾಡುವುದಾಗಿ ಘೋಷಿಸಿದರು. ಏ.20 ರಂದು ನಾಮಪತ್ರ ಸಲ್ಲಿಸುವುದಾಗಿ ಹೇಳಿದರು.