ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ನ ಅಹಮದಾಬಾದ್ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ.
ಈ ಪೈಕಿ 241 ಮಂದಿ ವಿಮಾನದಲ್ಲಿ ಇದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್ನಲ್ಲಿ ಇದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂಬುದು ತಿಳಿದು ಬಂದಿದೆ. ಆದರೆ ಮೃತರ ಗುರುತು ಸಿಕ್ಕಿಲ್ಲ.
ಗುರುವಾರ ಮಧ್ಯಾಹ್ನ ಅಹಮದಾಬಾದ್ನಿಂದ ಲಂಡನ್ನ ಗ್ಯಾಟ್ವಿಕ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಾನಿ ನಗರದಲ್ಲಿ ವೈದ್ಯಕೀಯ ಕಾಲೇಜು ಹಾಸ್ಟೆಲ್ ಮೇಲೆ ಪತನವಾಗಿ ಘನಘೋರ ದುರಂತ ಸಂಭವಿಸಿತ್ತು.
ವಿಮಾನದಲ್ಲಿದ್ದ ಏಕೈಕ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ವಿಶ್ವಾಸ್ ಕುಮಾರ್ ಮಾತ್ರ ಪವಾಡಸದೃಶವಾಗಿ ಬದುಕುಳಿದಿದ್ದರು. ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಯಾಣಿಕರಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಸೇರಿದ್ದಾರೆ.
ಏತನ್ಮಧ್ಯೆ, ವಿಮಾನ ಪತನದ ಕಾರಣಗಳನ್ನು ಪತ್ತೆಹಚ್ಚಲು ತನಿಖೆ ತ್ವರಿತಗತಿಯಲ್ಲಿ ಸಾಗುತ್ತಿದೆ. ತನಿಖೆಯಲ್ಲಿ ಮಹತ್ವದ ಪಾತ್ರವಹಿಸಲಿರುವ ನಿರ್ಣಾಯಕ ಸಾಧನವಾಗಿದ್ದ ಒಂದು ಬ್ಲ್ಯಾಕ್ ಬಾಕ್ಸ್ ಅನ್ನು ಗುರುವಾರ ರಾತ್ರಿ ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ. ಎರಡನೇ ಬ್ಲ್ಯಾಕ್ ಬಾಕ್ಸ್ ಮತ್ತು ಡಿಜಿಟಲ್ ವಿಡಿಯೋ ರೆಕಾರ್ಡರ್ಗಾಗಿ (ಡಿವಿಆರ್) ಶೋಧ ಕಾರ್ಯ ಮುಂದುವರೆದಿದ್ದು, ಇವುಗಳು ಪ್ರಮುಖ ಸುಳಿವುಗಳನ್ನು ನೀಡಲಿವೆ.