ಹೊಸದಿಗಂತ ವರದಿ ಹುಬ್ಬಳ್ಳಿ:
ನಗರದ ರಾಣಿ ಚನ್ನಮ್ಮ ಮೈದಾನದಲ್ಲಿ ರಾಣಿ ಚನ್ನಮ್ಮಮೈದಾನ ಗಜಾನನ ಉತ್ಸವ ಮಹಾಮಂಡಳಿಗೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಶುಕ್ರವಾರ ರಾತ್ರಿ 10 ಗಂಟೆಗೆ ಅನುಮತಿ ನೀಡುವ ಮೂಲಕ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಗೊಂದಲಕ್ಕೆ ತೆರೆ ಎಳೆದರು. ಇದರಿಂದ ಎರಡು ದಿನಗಳಿಂದ ಅಹೋ ರಾತ್ರಿ ಧರಣಿ ನಡೆಸಿದ್ದ ಬಿಜೆಪಿ ಹಾಗೂ ವಿವಿಧ ಹಿಂದೂ ಸಂಘಟನೆಗಳಿಗೆ ಜಯ ಸಿಕ್ಕಂತಾಗಿದೆ.
ಮಹಾಮಂಡಳಿಯ ಅಧ್ಯಕ್ಷ ಸಂಜೀವ ಬಡಸ್ಕರ ಅವರಿಗೆ ಆಯುಕ್ತರು ಮೂರು ದಿನಗಳ ಕಾಲ ಮೈದಾನದಲ್ಲಿ ಷರತ್ತಿಗೊಳಪಟ್ಟು ಗಣೇಶೋತ್ಸವ ಆಚರಿಸಲು ಅನುಮತಿ ಪತ್ರವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಸೇರಿದಂತೆ ಬಿಜೆಪಿ, ಹಿಂದೂ ಸಂಘಟನೆ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಹರ್ಷ ವ್ಯಕ್ತಪಡಿಸಿದರು. ಅಹೋರಾತ್ರಿ ಧರಣಿ ಕೈಬಿಟ್ಟರು.
ನಗರದ ರಾಣಿ ಚನ್ನಮ್ಮ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನಾ ಅನುಮತಿಗೆ ಆಗ್ರಹಿಸಿ ಬಿಜೆಪಿ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಅಹೋ ರಾತ್ರಿ ಧರಣಿ ಶುಕ್ರವಾರ ಎರಡನೇ ದಿನವೋ ನಡೆಯಿತು. ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಗುರುವಾರ ಬೆಳಿಗ್ಗೆಯಿಂದ ಆರಂಭವಾದ ಪ್ರತಿಭಟನೆ ಅಹೋರಾತ್ರಿ ನಡೆಯಿತು. ಪಾಲಿಕೆಯ ಬಿಜೆಪಿ ಸದಸ್ಯರು ಆಯುಕ್ತರ ಕಚೇರಿಯಲ್ಲಿಯೇ ಮಲಗಿ ಪ್ರತಿಭಟಿಸಿದರು. ಮಹಾನಗರ ಪಾಲಿಕೆ ಆಯುಕ್ತರು ಅನುಮತಿ ವಿಳಂಬ ಮಾಡುತ್ತಿರುವುದನ್ನು ವಿರೋಸಿ ಪ್ರತಿಭಟನಾಕಾರರ ವಿವಿಧ ಬಗೆಗಳಿಂದ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.