ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದ ತನಿಖೆಯನ್ನು ಅಪರಾಧ ತನಿಖಾ ಇಲಾಖೆ (CID) ಆರಂಭಿಸಿದೆ.
ವಿಮಾನ ಅವಘಡದ ಬಳಿಕ ಪುಣೆ ಗ್ರಾಮೀಣ ಠಾಣೆ ಪೊಲೀಸರು ಬಿಎನ್ಎಸ್ಎಸ್ ಸೆಕ್ಷನ್ 194ರ ಅಡಿಯಲ್ಲಿ ಆಕಸ್ಮಿಕ ಸಾವು ಪ್ರಕರಣವನ್ನು ದಾಖಲಿಸಿದ್ದರು. ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಸಿಐಡಿ ಅಧಿಕಾರಿಗಳು ಈಗಾಗಲೇ ತನಿಖೆ ಆರಂಭಿಸಿದ್ದಾರೆ.
ಬಾರಾಮತಿಯಲ್ಲಿ ಟೇಬಲ್ಟಾಪ್ ಏರ್ಸ್ಟ್ರಿಪ್ನ ಅಂಚಿನಿಂದ ಕೇವಲ 200 ಮೀಟರ್ ದೂರದಲ್ಲಿ ಲಿಯರ್ಜೆಟ್ 45 ವಿಮಾನ ಪತನಗೊಂಡಿತ್ತು. ಈ ಅವಘಡದಲ್ಲಿ ಅಜಿತ್ ಪವಾರ್ (66) ಅವರ ವೈಯಕ್ತಿಕ ಭದ್ರತಾ ಅಧಿಕಾರಿ ವಿದೀಪ್ ಜಾಧವ್ ಮತ್ತು ಫ್ಲೈಟ್ ಅಟೆಂಡೆಂಟ್ ಪಿಂಕಿ ಮಾಲಿ, ಕ್ಯಾಪ್ಟನ್ ಸುಮಿತ್ ಕಪೂರ್ ಸಹ-ಪೈಲಟ್ ಕ್ಯಾಪ್ಟನ್ ಶಾಂಭವಿ ಪಾಠಕ್ ಮೃತಪಟ್ಟಿದ್ದರು.
ಸಿಐಡಿ ಅಧಿಕಾರಿಗಳ ತಂಡ ಪುಣೆ ಗ್ರಾಮೀಣ ಪೊಲೀಸರಿಂದ ಸಂಬಂಧಿತ ದಾಖಲೆಗಳನ್ನು ಸಂಗ್ರಹಿಸಲಿದೆ. ಬಳಿಕ ಬಾರಾಮತಿ ಏರ್ಸ್ಟ್ರಿಪ್ ಬಳಿಯ ಅಪಘಾತ ಸ್ಥಳಕ್ಕೆ ಭೇಟಿ ನೀಡಲಿದೆ. ಇನ್ನೂ ನಾಗರಿಕ ವಿಮಾನಯಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಕೂಡ ಅಪಘಾತದ ಬಗ್ಗೆ ಔಪಚಾರಿಕ ತನಿಖೆಯನ್ನು ಪ್ರಾರಂಭಿಸಿದೆ.



