ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಯಲ್ಲಿ ಕನೌಜ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಕರಹಲ್ ವಿಧಾನಸಭಾ ಕ್ಷೇತ್ರದ ಶಾಸಕನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಮೂಲಕ ಕನೌಜ್ ಲೋಕಸಭಾ ಕ್ಷೇತ್ರದ ಸಂಸದನ ಸ್ಥಾನದಲ್ಲಿ ಮುಂದುವರಿಯಲುತೀರ್ಮಾನಿಸಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ, ಕನೌಜ್ ಕ್ಷೇತ್ರದ ಪ್ರತಿನಿಧಿಯಾಗಿ ಮುಂದುವರಿಯುವ ಸೂಚನೆಯನ್ನು ಅಖಿಲೇಶ್ ಈ ಹಿಂದೆ ನೀಡಿದ್ದರು.
ಎಸ್ಪಿ ಈಗ ಲೋಕಸಭೆಯಲ್ಲಿ 37 ಸಂಸದರನ್ನು ಹೊಂದಿದ್ದು, ದೊಡ್ಡ ಶಕ್ತಿಯಾಗಿ ಬೆಳೆದಿದೆ. ಸಂಖ್ಯಾಬಲದ ಆಧಾರದಲ್ಲಿ ಎಸ್ಪಿ ಲೋಕಸಭೆಯಲ್ಲಿ ಈಗ ಮೂರನೆಯ ಅತಿದೊಡ್ಡ ಪಕ್ಷವಾಗಿದೆ ಎಂದು ಅವರು ಹೇಳಿದರು.
ಅಖಿಲೇಶ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಇದ್ದರೆ, ಪಕ್ಷದ ನೆಲೆ ವಿಸ್ತರಿಸಲು ಸಹಾಯವಾಗುತ್ತದೆ. ಅಲ್ಲದೆ, ಅಖಿಲೇಶ್ ಅವರೂ ರಾಜಕೀಯವಾಗಿ ಬೆಳೆಯುತ್ತಾರೆ ಎಂದು ಪಕ್ಷದ ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ಅಖಿಲೇಶ್ ಅವರು ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕರೂ ಹೌದು. ಶಾಸಕ ಸ್ಥಾನಕ್ಕೆ ತಾವು ರಾಜೀನಾಮೆ ಸಲ್ಲಿಸಿದ ನಂತರ, ವಿರೋಧ ಪಕ್ಷದ ನಾಯಕ ಯಾರಾಗಬೇಕು ಎಂಬುದನ್ನು ಪಕ್ಷವು ತೀರ್ಮಾನಿಸುತ್ತದೆ ಎಂದು ಅಖಿಲೇಶ್ ಹೇಳಿದ್ದಾರೆ.