ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್ ಪಡೆಯುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದರು.
ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದರು. 2023 ಕ್ಕೆ ಈ ನಾಮಕರಣ ಆಗಿ 50 ವರ್ಷ ತುಂಬಿದರೂ ಆಗಿನ ಬಿಜೆಪಿ ಸರ್ಕಾರ ಈ ಸುವರ್ಣೋತ್ಸವವನ್ನು ಬೇಕಂತಲೇ ಕೈಬಿಟ್ಟರು. ಆದರೆ ನಾವು ಅಧಿಕಾರಕ್ಕೆ ಬಂದು ಒಂದು ವರ್ಷ ಲೇಟಾದರೂ ಕರ್ನಾಟಕದ ಸುವರ್ಣೋತ್ಸವವನ್ನು ಆರಂಭಿಸಿ ಇಡೀ ವರ್ಷ ಆಚರಿಸಲು ನಿರ್ಧರಿಸಿದೆವು. ಕನ್ನಡ ಭಾಷೆ, ಸಂಸ್ಕೃತಿ ವಿಚಾರದಲ್ಲಿ ಇದು ನಮ್ಮ ಬದ್ಧತೆ ಎಂದು ಸ್ಪಷ್ಟಪಡಿಸಿದರು.
ಕನ್ನಡ ಭಾಷೆ, ಸಂಸ್ಕೃತಿ, ಕಲೆಯನ್ನು ರಾಜ್ಯದ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು. ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕರ್ನಾಟಕ ಎನ್ನುವುದು ನಮ್ಮ ನಿಮ್ಮೆಲ್ಲರ ಅಭಿಮಾನವಾಗವಾಗಬೇಕು. ಆಗ ಮಾತ್ರ ಕನ್ನಡ ಸಾರ್ವಭೌಮಭಾಷೆಯಾಗುತ್ತದೆ ಎಂದರು.
ಒಂದು ಭಾಷೆ ಮಾತನಾಡುವ ಜನ ಒಂದು ಆಡಳಿತದ ಸೂರಿನಡಿ ಬರಬೇಕು ಎನ್ನುವುದು ಕನ್ನಡ ಏಕೀಕರಣ ಚಳವಳಿಯ ಆಶಯವಾಗಿತ್ತು. ಈ ಆಶಯ ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಕನ್ನಡ ಓದುವುದನ್ನು, ಬರೆಯುವುದನ್ನು ಹೆಚ್ಚೆಚ್ಚು ಕಲಿಯಬೇಕು, ಕಲಿಸಬೇಕು ಎಂದು ಕರೆ ನೀಡಿದರು.
ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್ ಪಡೆಯಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿ.ಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.