ಹೊಸದಿಗಂತ ವರದಿ, ಕಲಬುರಗಿ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರವರ ಅಳಿಯ ರಾಧಾಕೃಷ್ಣ ಹಾಗೂ ಖರ್ಗೆ ಅವರ ಪುತ್ರ ಪ್ರಿಯಾಂಕ್ ಅವರು ನಡೆಸುತ್ತಿರುವ ಕರ್ನಾಟಕ ಪೀಪಲ್ಸ್ ಎಜುಕೇಶನ್ ಸೊಸೈಟಿಯು ಜಿಲ್ಲಾಡಳಿತದಿಂದ ಕಲ್ಯಾಣ ಮಂಟಪ ನಿರ್ಮಿಸಲು ಉಚಿತವಾಗಿ ಭೂಮಿ ಪಡೆದು ಇದೀಗ ಸೊಸೈಟಿ ಕಚೇರಿ ನಡೆಸುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಆರಂಭಿಸಿದ್ದೇನೆ ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಣಿಕಂಠ, ಜೇವರ್ಗಿ ಶಾಸಕ ಅಜಯ್ ಸಿಂಗ್ ಅವರು ತಮ್ಮದೇ ಕುಟುಂಬದಿಂದ ಹಣ ಖರ್ಚು ಮಾಡಿ ಕ್ಷೇತ್ರದ ಜನತೆಗೆ ಉಚಿತವಾಗಿ ಕಲ್ಯಾಣ ಮಂಟಪವನ್ನು ನಿರ್ಮಿಸಿದ್ದಾರೆ. ಆದರೆ, ಖರ್ಗೆ ಕುಟುಂಬದವರು ಸರ್ಕಾರವೇ ಕಲ್ಯಾಣ ಮಂಟಪಕ್ಕೆಂದು ಉಚಿತವಾಗಿ ನೀಡಿದ ಭೂಮಿಯಲ್ಲಿ ಸೊಸೈಟಿ ಕಚೇರಿ ನಡೆಸುವುದು ಎಷ್ಟು ಸರಿ ಎಂದರು.
ಜಿಲ್ಲಾಧಿಕಾರಿ ಅವರು ನಿವೇಶನ ಹಂಚಿಕೆ ಸಂದರ್ಭದಲ್ಲಿ ವಿಧಿಸಿದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದೇನೆ ಎಂದರು.
ನಗರದ ಸಹರಾ ರಿಯಲ್ ಎಸ್ಟೇಟ್ ಸಂಸ್ಥೆಯಲ್ಲಿ ಕಾಂಗ್ರೆಸ್ ಪಕ್ಷದ ಕೆಲ ಮಾಜಿ ಸಚಿವರ ಪಾಲುದಾರಿಕೆಯಿದ್ದು, ಮುಂದಿನ ದಿನಗಳಲ್ಲಿ ದಾಖಲೆಗಳೊಂದಿಗೆ ಬಹಿರಂಗಪಡಿಸುತ್ತೇನೆ ಎಂದು ಹೇಳಿದರು.