ಮಹಿಳೆಗೆ ಕಿರುಕುಳದ ಆರೋಪ: ಎನ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್ ವಿರುದ್ಧ ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಥಾಣೆಯಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಮತ್ತು ಶಾಸಕ ಜಿತೇಂದ್ರ ಅವ್ಹಾದ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಾಯಕನ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ದೂರುದಾರರ ಪ್ರಕಾರ, ನವೆಂಬರ್ 13 ರಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮುಂಬ್ರಾ-ಶಿಲ್ಫತಾ ವೈ-ಜಂಕ್ಷನ್ ಮೇಲ್ಸೇತುವೆಯನ್ನು ಉದ್ಘಾಟಿಸಲು ಬಂದಿದ್ದಾಗ, ಇತರರೊಂದಿಗೆ ಸಿಎಂ ಅವರನ್ನು ಭೇಟಿ ಮಾಡಲು ಹೋಗುತ್ತಿದ್ದಾಗ ಎನ್‌ಸಿಪಿ ನಾಯಕ ತನ್ನ ಕೈ ಹಿಡಿದು ಪಕ್ಕಕ್ಕೆ ತಳ್ಳಿದರು ಎಂದು ಮಹಿಳೆ ಆರೋಪಿಸಿದ್ದಾರೆ ಎನ್ನಲಾಗಿದೆ.

ಮಹಿಳೆಯ ಹೇಳಿಕೆ ಹಾಗೂ ವಿಡಿಯೋ ಆಧರಿಸಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಎನ್‌ಸಿಪಿಯ ಜಿತೇಂದ್ರ ಅವ್ಹಾದ್, “ಪೊಲೀಸರು ನನ್ನ ವಿರುದ್ಧ 72 ಗಂಟೆಗಳಲ್ಲಿ ಎರಡು ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಪೊಲೀಸ್ ದೌರ್ಜನ್ಯದ ವಿರುದ್ಧ ನಾನು ಹೋರಾಡುತ್ತೇನೆ. ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಇದು ಪ್ರಜಾಪ್ರಭುತ್ವದ ಹತ್ಯೆಯಾಗಿದೆ” ಎಂದು ಶಾಸಕರು ಹೇಳಿದ್ದಾರೆ. ಅಲ್ಲದೇ ಟ್ವೀಟರ್‌ ನಲ್ಲಿ ತಾವು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!