ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎನ್ನುವ ಆರೋಪದ ಮೇಲೆ ಎಸ್ಐಟಿಯಿಂದ ತನಿಖೆ ನಡೆಸಬೇಕು ಎಂದು ಮಾಡಲಾಗಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳು ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಮನವಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಯಮಾಲ್ಯ ಬಾಗಚಿ ಅವರಿದ್ದ ಸರ್ವೋಚ್ಚ ನ್ಯಾಯಪೀಠ, ಎಸ್ಐಟಿಗೆ ತನಿಖೆ ವಹಿಸಲು ನಿರಾಕರಿಸಿತು. ಈ ವಿಷಯವನ್ನು ಭಾರತೀಯ ಚುನಾವಣಾ ಆಯೋಗದಲ್ಲಿ ಬಗೆಹರಿಸಿಕೊಳ್ಳಬೇಕೆಂದು ಸೂಚಿಸಿತು.
ಈ ವೇಳೆ ಅರ್ಜಿದಾರರ ಪರ ವಕೀಲರು ಉತ್ತರಿಸಿ, ಚುನಾವಣಾ ಆಯೋಗಕ್ಕೆ ದೂರು ಕೊಡಲಾಗಿದ್ದು, ಇನ್ನೂ ಯಾವುದೇ ಕ್ರಮ ತೆಗೆದುಕೊಳ್ಳಲಾಗಿಲ್ಲ ಎಂದು ವಾದಿಸಿದರು.
ಚುನಾವಣಾ ಆಯೋಗ ಯಾವಾಗ ಕ್ರಮ ಕೈಗೊಳ್ಳಬೇಕು ಎಂದು ಒಂದು ಗಡುವು ನಿಗದಿ ಮಾಡಬೇಕು ಎಂದೂ ಮನವಿ ಮಾಡಿದರು. ಕೋರ್ಟ್ ಈ ಮನವಿಯನ್ನೂ ತಿರಸ್ಕರಿಸಿತು.
ಅರ್ಜಿದಾರರ ವಕೀಲರ ವಾದ ಆಲಿಸಿದೆವು. ಸಾರ್ವಜನಿಕ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಸಲಾಗಿದೆ. ಆದರೆ, ಅರ್ಜಿಯನ್ನು ಪುರಸ್ಕರಿಸದಿರಲು ನಿರ್ಧರಿಸಿದ್ದೇವೆ. ಚುನಾವಣಾ ಆಯೋಗದಲ್ಲಿ ಪ್ರಕರಣ ತೆಗೆದುಕೊಂಡು ಹೋಗಬೇಕೆಂದು ಅರ್ಜಿದಾರರಿಗೆ ಸಲಹೆ ನೀಡಿದ್ದೇವೆ ಎಂದು ನ್ಯಾಯಪೀಠ ತಿಳಿಸಿತು.