ಹೊಸದಿಗಂತ ವರದಿ ಬೆಳಗಾವಿ:
ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ಯುವಕನನ್ನು ಮದುವೆಯಾಗದಂತೆ ಒತ್ತಡ ಹೇರಲಾಗುತ್ತಿದ್ದು, ಖಾಸಗಿ ಕ್ಷಣಗಳ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.
ಯುವತಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ ಎಂದು ತಿಳಿದುಬಂದಿದೆ.
ಈ ಪ್ರಕರಣದಲ್ಲಿ ಬೆಳಗಾವಿಯ ಕಾಂಗ್ರೆಸ್ ಮುಖಂಡೆ ಆಯೇಶಾ ಸನದಿ ವಿರುದ್ಧ ಯುವತಿಯ ಪೋಷಕರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಲೀಂ ಕಿಲ್ಲೇದಾರ್ ಎಂಬ ಯುವಕ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಲ್ಲದೆ, ಆಕೆಯ ಖಾಸಗಿ ಕ್ಷಣಗಳ ಫೋಟೋಗಳನ್ನು ತನ್ನ ಬಳಿ ಇಟ್ಟುಕೊಂಡಿದ್ದಾನೆ ಎಂದು ದೂರಲಾಗಿದೆ.
ಯುವತಿ ಇದೀಗ ಸಲೀಂನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಾಳೆ. ಆದರೆ, ಆಯೇಶಾ ಸನದಿ ಯುವಕನನ್ನು ಬಿಟ್ಟುಬಿಡುವಂತೆ ಒತ್ತಡ ಹೇರಿದ್ದು, ಇಲ್ಲವಾದಲ್ಲಿ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.
ಇದನ್ನೂ ಓದಿ:
“ಸಚಿವ ಸತೀಶ್ ಜಾರಕಿಹೊಳಿ ಅವರ ಪಿಎ ಪರಿಚಯವಿದ್ದು, ಪೊಲೀಸ್ ಠಾಣೆಯಲ್ಲಿ ತನ್ನ ಮಾತು ನಡೆಯುತ್ತದೆ. ಯಾವುದೇ ಕಾರಣಕ್ಕೂ ಯುವಕನನ್ನು ಮದುವೆಯಾಗಬಾರದು” ಎಂದು ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಬೆಳವಣಿಗೆಗಳಿಂದ ಮಾನಸಿಕವಾಗಿ ಕುಗ್ಗಿದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಕುಟುಂಬದವರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಯುವತಿಯ ಪೋಷಕರು ಬೆಳಗಾವಿ ಪೊಲೀಸ್ ಆಯುಕ್ತರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.
ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಗಳ ವಿರುದ್ದ ತನಿಖೆಯನ್ನು ಕೈ ಗೊಂಡ ಬಳಿಕವೇ ಪ್ರಕರಣದ ತಿರುವು ತಿಳಿದು ಬರಲಿದೆ.



