ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅಶ್ಲೀಲ ಪದ ಬಳಸಿದ ಆರೋಪದ ಹಿನ್ನೆಲೆಯಲ್ಲಿ ಎಂಎಲ್ಸಿ ಸಿಟಿ ರವಿ ಅವರನ್ನು ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದರು. ಇದೀಗ ಈ ಒಂದು ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಂಎಲ್ಸಿ ಸಿಟಿ ರವಿ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಇಮೇಲ್ ಮುಖಾಂತರ ಸುಮಾರು 13 ಪುಟಗಳ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಬಂಧನದ ವೇಳೆ ಪೊಲೀಸ್ ದೌರ್ಜನ್ಯ, ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದು, ದೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವರುಗಳು ಹಾಗೂ ಪೊಲೀಸ್ ಅಧಿಕಾರಿಗಳ ಹೆಸರುಗಳನ್ನು ಕೂಡ ಸಿಟಿ ರವಿ ಅವರು ಉಲ್ಲೇಖಿಸಿದ್ದಾರೆ. ಡಿಜಿಪಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಾಡಾ ಮಾರ್ಟಿನ್ ಬೆಳಗಾವಿಯ ಎಸ್ ಪಿ ಭೀಮಾ ಶಂಕರ್ ಗುಳೇದ್, ಡಿಸಿಎಂ ಡಿಕೆ ಶಿವಕುಮಾರ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹೆಸರನ್ನು ಉಲ್ಲೆಖಿಸಿದ್ದಾರೆ.
ಅಲ್ಲದೇ ಎಂಎಲ್ಸಿ ಗಳಾದಂತಹ ಚನ್ನರಾಜ ಹಟ್ಟಿಹೊಳಿ, ಬಸನಗೌಡ ಬಾದರ್ಲಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಕಾರ್ಯದರ್ಶಿ ಮತ್ತು ಅವರ ಪಿಎ ಗಳ ಒಳಗೊಳ್ಳುವಿಕೆ ಬಗ್ಗೆ ದೂರು ನೀಡಿದ್ದಾರೆ. ಬಾಗೇವಾಡಿ ಸಿಪಿಐ ರಾಜು ಪಾಟೀಲ್ ಹೆಸರು ಕೂಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಗೃಹ ಸಚಿವ ಜಿ ಪರಮೇಶ್ವರ್ ಮುಖ್ಯ ಕಾರ್ಯದರ್ಶಿ ಗೃಹ ಇಲಾಖೆಯ ಕಾರ್ಯದರ್ಶಿ ದೌರ್ಜನ್ಯ ತಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ಸಿಟಿ ರವಿ ಆರೋಪಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಬಿಜೆಪಿ ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.