ಹೊಸದಿಗಂತ ವರದಿ, ಮಡಿಕೇರಿ:
ಕೊಡಗು ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ನಮಗೆ ಯಾರೂ ಎದುರಾಳಿಗಳಿಲ್ಲ. ಈ ಭಾಗದಲ್ಲಿ ಶೇಕಡಾ ನೂರರಷ್ಟು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಕರ್ನಾಟಕದಲ್ಲಿ ಪೂರ್ಣ ಬಹುಮತದೊಂದಿಗೆ ಡಬಲ್ ಎಂಜಿನ್ ಸರಕಾರ ರಚನೆಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.
ಮಡಿಕೇರಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಯಾತ್ರೆಯಲ್ಲಿ ಭಾಗವಹಿಸಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಡ್ಡಗಾಡು ಪ್ರದೇಶವಾದ ಕೊಡಗಿನಂತಹ ಪುಟ್ಟ ಜಿಲ್ಲೆಯಲ್ಲಿ ಬಿಜೆಪಿಗೆ ಇಷ್ಟೊಂದು ಜನ ಬೆಂಬಲ ವ್ಯಕ್ತವಾಗಿರುವುದೇ ಬಿಜೆಪಿ ಗೆಲ್ಲಲಿರುವುದಕ್ಕೆ ಸಾಕ್ಷಿಯಾಗಿದೆ ಎಂದು ನುಡಿದರು.
ಕರ್ನಾಟಕದಲ್ಲಿ ಬಹುಮತಕ್ಕೆ ಬೇಕಾಗಿರುವ ನಿಗದಿತ ಸ್ಥಾನಕ್ಕಿಂತಲೂ ಹೆಚ್ಚುವರಿಯಾಗಿ 15 ಸೀಟುಗಳನ್ನು ಬಿಜೆಪಿ ಪಡೆಯಲಿದ್ದು, ಮೋದಿ ನೇತೃತ್ವದಲ್ಲಿ ಕರ್ನಾಟಕ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಅವರು ಹೇಳಿದರು.
ಮೋದಿ ವಿರುದ್ದ ಯಾರು ಎಷ್ಟು ಕೆಟ್ಟದಾಗಿ ಮಾತನಾಡುತ್ತಾರೋ ನಮ್ಮ ಶಕ್ತಿ ಮತ್ತಷ್ಟು ಹೆಚ್ಚಲಿದೆ ಎಂದು ಶಾ ನುಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಅಭ್ಯರ್ಥಿಗಳಾದ ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಸಂಸದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯ ಸುಜಾಕುಶಾಲಪ್ಪ, ಪ್ರತಾಪ್ ಸಿಂಹ ನಾಯಕ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.