ಇಂದು ರಾಜ್ಯಕ್ಕೆ ಅಮಿತ್ ಶಾ: ಕುತೂಹಲ ಕೆರಳಿಸಿದೆ ‘ಚಾಣಕ್ಯ’ನ ಭೇಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆ.3ರ ಬುಧವಾರ ಕರ್ನಾಟಕಕ್ಕೆ ಆಗಮಿಸಲಿದ್ದು, ಸಂಕಲ್ಪ್ ಸೇ ಸಿದ್ಧಿ 3ನೇ ಆವೃತ್ತಿಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಬುಧವಾರ ರಾತ್ರಿ 9 ಗಂಟೆಗೆ ಹೊಸದಿಲ್ಲಿಯಿಂದ ಹೊರಟು 11 ಗಂಟೆ ವೇಳೆಗೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹಲೋತ್, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖರು ಸ್ವಾಗತಿಸಲಿದ್ದಾರೆ.

ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ರಾತ್ರಿ 11.30ರ ಹೊತ್ತಿಗೆ ಖಾಸಗಿ ಹೋಟೆಲ್ ತಲುಪಲಿರುವ ಶಾ, ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಗುರುವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ನಡೆಯಲಿರುವ ಸಂಕಲ್ಪ್ ಸೇ ಸಿದ್ಧಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಧ್ಯಾಹ್ನ ಭೋಜನ ಮುಗಿಸಿ 2 ಗಂಟೆಗೆ ಹೊಸದಿಲ್ಲಿಯತ್ತ ತೆರಳಲಿದ್ದಾರೆ.

ಪಕ್ಷದ ಪ್ರಮುಖರೊಂದಿಗೆ ಸಭೆ

ಆ.4ರ ಗುರುವಾರ ಬೆಳಗ್ಗೆ 11 ಗಂಟೆಗೆ ಸಮ್ಮೇಳನ ಇರುವುದರಿಂದ ಅದಕ್ಕೂ ಮುನ್ನ ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸುವ ಸಾಧ್ಯತೆಗಳಿವೆ. ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಈ ಸಭೆ ಪ್ರಮುಖವಾಗಿರಲಿದೆ. ಇತ್ತೀಚೆಗೆ ರಾಜ್ಯದ ಕರಾವಳಿ ಭಾಗದಲ್ಲಿ ನಡೆದಿರುವ ಕೊಲೆ ಪ್ರಕರಣಗಳು ಸೇರಿದಂತೆ ಕಾನೂನು ಸುವ್ಯವಸ್ಥೆ ಹಾಗೂ ರಾಜಕೀಯ ಸನ್ನಿವೇಶದ ಕುರಿತೂ ರಾಜ್ಯ ಸರ್ಕಾರದಿಂದ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಮಧ್ಯಾಹ್ನ 1ರಿಂದ 2 ಗಂಟೆವರೆಗೆ ಮಧ್ಯಾಹ್ನ ಭೋಜನಕ್ಕೆಂದು ಸಮಯ ಮೀಸಲಿಟ್ಟಿದ್ದು, ಈ ಸಂದರ್ಭದಲ್ಲಿಯೂ ಕೆಲ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!