ಫೆ.11 ಪುತ್ತೂರಿಗೆ ಅಮಿತ್ ಶಾ ಭೇಟಿ: ಪೂರ್ವಸಿದ್ಧತೆ ಕುರಿತು ಅಧಿಕಾರಿಗಳ ಜೊತೆ ಶಾಸಕರ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸುವರ್ಣ ಮಹೋತ್ಸವ ಆಚರಿಸುತ್ತಿರುವ ಪ್ರತಿಷ್ಠಿತ ಸಹಕಾರಿ ಸಂಸ್ಥೆ ಕ್ಯಾಂಪ್ಕೋದ ಕಾರ್ಯಕ್ರಮಕ್ಕೆ ಫೆ 11 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಪೂರಕ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ವಿವಿಧ ಇಲಾಧಿಕಾರಿಗಳ ಸಭೆಯು ತಾಲೂಕ್ ಪಂಚಾಯತ್ ಕಿರು ಸಭಾಂಗಣದಲ್ಲಿ ನಡೆಯಿತು.

ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಕಾರ್ಯಕ್ರಮವು ಫೆ.11 ರಂದು ತೆಂಕಿಲ ವಿವೇಕಾನಂದ ಶಾಲೆಯ ಮೈದಾನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಹಿತ ಸಚಿವರು ಆಗಮಿಸಲಿದ್ದಾರೆ. ಅವರು ಬರುವಂತಹ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ, ಸಾರಿಗೆ ವ್ಯವಸ್ಥೆ, ಸಂಚಾರದಲ್ಲಿ ತೊಂದರೆ ಆಗದಂತೆ, ಸ್ವಚ್ಛತೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ನೋಡುವ ದೃಷ್ಟಿಯಿಂದ ತಾಲೂಕು ಆಡಳಿತ ಅದಕ್ಕೆ ಪೂರಕ ವ್ಯವಸ್ಥೆ ಮಾಡಬೇಕು ಎಂದು ಸಂಜೀವ ಮ ಮಠಂದೂರು ಸೂಚಿಸಿದರು.

ತೆಂಕಿಲದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸುಮಾರು 1 ಲಕ್ಷದಷ್ಟು ಸಾರ್ವಜನಿಕರು ಸೇರುವ ನಿರೀಕ್ಷೆ ಇದೆ. ಪುತ್ತೂರು, ಸುಳ್ಯ, ಕಡಬ, ಬಂಟ್ವಾಳದಿಂದ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲು ಬರುವಾಗ ಅವರ ವಾಹನದ ಪಾರ್ಕಿಂಗ್ ವ್ಯವಸ್ಥೆಯು ಆಗಬೇಕಾಗಿದೆ. ಸಚಿವರು ಹೆಲಿಕಾಫ್ಟರ್‌ನಲ್ಲಿ ಮಂಗಳೂರು ಬಜ್ಪೆಯಿಂದ ಬರಲಿದ್ದಾರೆ. ಈ ರೀತಿ ಬಂದವರು ಸಂತ ಫಿಲೋಮಿನಾ ಕಾಲೇಜು ಮೈದಾನದಲ್ಲೇ ಇಳಿಯುವ ನಿರೀಕ್ಷೆ ಇದೆ. ಇದರ ಜೊತೆಗೆ ಹನುಮಗಿರಿಗೆ ಹೋಗುವ ಸಾಧ್ಯತೆ ಇರುವುದರಿಂದ ಕಾವು ಸಮೀಪವು ಹೆಲಿಕಾಫ್ಟರ್ ಲ್ಯಾಂಡ್ ಮಾಡಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಶಾಸಕರು ಸೂಚನೆ ನೀಡಿದರು.

ಡಿವೈಎಸ್ಪಿ ವೀರಯ್ಯ ಹಿರೇಮಠ್ ಕಾನೂನು ಸುವ್ಯವಸ್ಥೆ ಮತ್ತು ಸಂಚಾರದ ದೃಷ್ಟಿಯಿಂದ ಮಾಹಿತಿ ನೀಡಿದರು. ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಲಿನ್ಸೆ ಕ್ವಾಲ್ವಿನ್ ಸ್ವೀಕೆರಾ ರಸ್ತೆ ಸುರಕ್ಷತೆಯ ಕುರಿತು ಮಾಹಿತಿ ನೀಡಿದರು. ಕ್ಯಾಂಪ್ಕೋದ ಸೀನಿಯರ್ ಮೆನೇಜರ್ ಪ್ರೇಮ್ ಜಿ ವೇದಿಕೆಯ ಸಿದ್ದತೆ ಕುರಿತು ಮಾಹಿತಿ ನೀಡಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಕೆ. ಜೀವಂಧರ್ ಜೈನ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಸಹಾಯಕ ಕಮೀಷನರ್ ಗಿರೀಶ್ ನಂದನ್, ಡಿವೈಎಸ್ಪಿ ವೀರಯ್ಯ ಹಿರೇಮಠ್, ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪುತ್ತೂರು ನಗರ ಪೊಲೀಸ್ ಠಾಣೆ ನಿರೀಕ್ಷಕ ಸುನಿಲ್, ಸಂಚಾರ ಪೊಲೀಸ್ ಠಾಣೆಯ ಎಸ್.ಐ. ರಾಜಶೇಖರ್, ಕ್ಯಾಂಪ್ಕೋ ಇಂಜಿನಿಯರ್ ಅಭಿಷೇಕ್, ತಾಲೂಕು ಆರೋಗ್ಯಾಧಿಕಾರಿ ದೀಪಕ್ ರೈ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಲತಾ, ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಟೌನ್ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ್ ರಾವ್ ಬಪ್ಪಳಿಗೆ, ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್, ಅಶೋಕ್ ಹಾರಾಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್. ಆರ್., ಗ್ರೇಡ್ 2 ತಹಸೀಲ್ದಾರ್ ಲೋಕೇಶ್, ಮೆಸ್ಕಾಂ ಇಂಜಿನಿಯರ್ ರಾಮಚಂದ್ರ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!