ಮಾರ್ಚ್‌ 3 ರಂದು ಬೀದರ್ ಗೆ ಅಮಿತ್ ಶಾ ಆಗಮನ: ಬಸವಕಲ್ಯಾಣದ ಅನುಭವ ಮಂಟಪದಲ್ಲಿ ವಿಜಯ ಸಂಕಲ್ಪ ಯಾತ್ರೆ!

ಹೊಸದಿಗಂತ ವರದಿ, ಬೀದರ್

ಚುನಾವಣೆಯ ಚಾಣಕ್ಯ ಎಂದು ಖ್ಯಾತಿ ಪಡೆದ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಮಾರ್ಚ್ 3ರಂದು ಬೀದರ ಜಿಲ್ಲೆಗೆ ಆಗಮಿಸಲಿದ್ದು, ಬಸವಕಲ್ಯಾಣದ ಅನುಭವ ಮಂಟಪದಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡುವರು ಎಂದು ವಿಜಯ ಸಂಕಲ್ಪ ಯಾತ್ರೆಯ ಜಿಲ್ಲಾ ಸಂಚಾಲಕರೂ ಆದ ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು.

ನಗರದ ಭಾರತೀಯ ಜನತಾ ಪಕ್ಷದ ಜಿಲ್ಲಾ‌ ಕಾರ್ಯಾಲಯದಲ್ಲಿ ಫೆಬ್ರವರಿ 26ರಂದು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.

ಮಾರ್ಚ್ 3ರ ಬೆಳಗ್ಗೆ 11 ಗಂಟೆಗೆ ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಅಮಿಶ್ ಶಾ ಅವರ ಅಮೃತ ಹಸ್ತದಿಂದ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ಸಿಗಲಿದೆ. ಬಳಿಕ ಮಧ್ಯಾಹ್ನ 12ಕ್ಕೆ‌ ಬಸವೇಶ್ವರ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ್, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಸಚಿವರಾದ ಶ್ರೀರಾಮುಲು, ಹಾಲಪ್ಪಾ ಆಚಾರ್ ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ಆಗಮಿಸುವ ನಿರೀಕ್ಷೆಯಿದೆ. ಜಿಲ್ಲೆಯ ಎಲ್ಲ ಮುಖಂಡರು ಭಾಗವಹಿಸುವರು. ಕಾರ್ಯಕ್ರಮದಲ್ಲಿ ಸುಮಾರು 50 ಸಾವಿರ ಜನ ಸೇರಲಿದ್ದಾರೆ ಎಂದು ಮಾಹಿತಿ ನೀಡಿದರು.

ನಂತರ ರಾಜ್ಯದ ಪ್ರಮುಖ ನಾಯಕರ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ವಿಜಯ ಸಂಕಲ್ಪ ಯಾತ್ರೆ ಸಂಚರಿಸಲಿದೆ. ಅಂದು ಮಧ್ಯಾಹ್ನ 2 ಗಂಟೆಗೆ ಹುಮನಾಬಾದಗೆ ಆಗಮಿಸಲಿದ್ದು, ಅಲ್ಲಿ ಬೃಹತ್ ರೋಡ್ ಶೋ ಮತ್ತು ಸಂಜೆ 5 ಗಂಟೆಗೆ ಭಾಲ್ಕಿಯ ಬಸವೇಶ್ವರ ವೃತ್ತದಲ್ಲಿ ಸಾರ್ವಜನಿಕ ಸಭೆ ಜರುಗಲಿದೆ ಎಂದರು.

ಯಾತ್ರೆ ಮಾರ್ಚ್ 4ರಂದು ಔರಾದ(ಬಿ) ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 10 ಗಂಟೆಗೆ ವಡಗಾಂವ, 10:30ಕ್ಕೆ ಸಂತಪೂರ ಮತ್ತು 11 ಗಂಟೆಗೆ ಔರಾದ(ಬಿ) ಪಟ್ಟಣದ ಎಪಿಎಂಸಿ ವೃತ್ತದಿಂದ ಬಸ್ ನಿಲ್ದಾಣದ ವರೆಗೆ ಬೃಹತ್ ರೋಡ್ ಶೋ ನಡೆಯಲಿದೆ. ಅಂದು ಮಧ್ಯಾಹ್ನ 12.30 ಗಂಟೆಗೆ ಔರಾದ ತಾಲ್ಲೂಕಿನ ಆರಾಧ್ಯ ದೈವ ಶ್ರೀ ಅಮರೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ನಂತರ 3 ಗಂಟೆಗೆ ಬೀದರ ನಗರದಲ್ಲಿ ಬೃಹತ್ ರೋಡ್ ಶೋ ನಡೆಯಲಿದೆ. ನಗರದ ರೋಟರಿ ವೃತ್ತದಿಂದ ಪ್ರಮುಖ ಮಾರ್ಗಗಳ ಮೂಲಕ ಬೊಮ್ಮಗೊಂಡೇಶ್ವರ ವೃತ್ತದ ವರೆಗೆ ಯಾತ್ರೆ ಸಂಚರಿಸಲಿದೆ.

ಬೀದರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಂಜೆ 4 ಗಂಟೆಗೆ ಕಮಠಾಣಾ, 4.15ಕ್ಕೆ ಬಗದಲ್, 4.30ಕ್ಕೆ ಮನ್ನಾಎಖ್ಖೆಳ್ಳಿಯಲ್ಲಿ ರೋಡ್ ಶೋ ನಡೆಸಿ ಸಂಜೆ 5 ಗಂಟೆಗೆ ಸುಕ್ಷೇತ್ರ ಚಾಂಗಲೇರಾದ ಶ್ರೀ ವೀರಭದ್ರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಯಾತ್ರೆಯು ಕಲಬುರಗಿ ಜಿಲ್ಲೆಯ ಚಿಂಚೋಳಿಯತ್ತ ಸಾಗಲಿದೆ ಎಂದು ಹೇಳಿದರು.

2023ರ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ಸರ್ವ ರೀತಿಯಿಂದ ಸನ್ನದ್ಧವಾಗಿದೆ. ಪಕ್ಷದಿಂದ ಈಗಾಗಲೆ ಬೂತ್ ಸಶಕ್ತೀಕರಣ, ಬುತ್ ವಿಜಯ ಅಭಿಯಾನ, ವಿಜಯ ಸಂಕಲ್ಪ ಅಭಿಯಾನ, ಮಿಸ್ಡ್ ಕಾಲ್ ಮೂಲಕ ಸದಸ್ಯರ ನೋಂದಣಿಯಂತಹ ನಾನಾ ಕಾರ್ಯಕ್ರಮಗಳು ನಡೆದಿವೆ. ಇದರ ಭಾಗವಾಗಿ ಈಗಾಗಲೇ ಜನಸಂಕಲ್ಪ ಯಾತ್ರೆ ಯಶಸ್ವಿಯಾಗಿದ್ದು, ವಿಜಯ ಸಂಕಲ್ಪ ಯಾತ್ರೆಯೂ ಅತ್ಯಂತ ಯಶಸ್ವಿಯಾಗಲಿದೆ ಎಂದು ತಿಳಿಸಿದರು.

ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿಜಯ ಸಂಕಲ್ಪ ಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಸಾಕಷ್ಟು ಗಟ್ಟಿಯಾಗಿ ನೆಲೆಯೂರಿದೆ. ಕಾರ್ಯಕರ್ತರ ಸಂಖ್ಯೆ ಸಾಕಷ್ಟು ಬೆಳೆದಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದ್ದು, ಅನೇಕ ಜನಪರ ಕೆಲಸಗಳು ನಡೆದಿವೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಮತ್ತು ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಪುನಃ ಅಧಿಕಾರಕ್ಕೆ ತರಲು ಹಲವಾರು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದರು.

ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ 151 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಮತ್ತೊಮ್ಮೆ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶಿವಾನಂದ ಮಂಠಾಳಕರ್, ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬು ವಾಲಿ, ಶಿವರಾಜ ಗಂದಗೆ, ಮುಖಂಡರಾದ ಸೂರ್ಯಕಾಂತ ನಾಗಮಾರಪಳ್ಳಿ, ವಿಜಯಕುಮಾರ ಪಾಟೀಲ ಗಾದಗಿ, ಅರಹಂತ ಸಾವಳೆ, ಶಿವಪುತ್ರ ವೈದ್ಯ, ಗುರುನಾಥ ಜ್ಯಾಂತಿಕರ್, ಶಶಿಧರ ಹೊಸಳ್ಳಿ, ರಾಜೇಂದ್ರ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!