ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀರಿನ ತೊಟ್ಟಿಯಲ್ಲಿ ಬಿದ್ದು ಹನ್ನೊಂದು ತಿಂಗಳ ಮಗು ಸಾವು ಕಂಡ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಶಿಕಾರಿಪುರ ತಾಲ್ಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಛಾಯಾಗ್ರಾಹಕ ದೇವರಾಜ್ ಹಾಗೂ ಅನುಷಾ ದಂಪತಿಯ ಮುದ್ದಿನ ಮಗನಾದ ಅಕ್ಷಯ್ (11 ತಿಂಗಳು ) ಮನೆಯ ಮುಂದಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ.
ಮುಂದಿನ ವಾರ ಒಂದನೇ ವರ್ಷಕ್ಕೆ ಕಾಲಿಡುತ್ತಿದ್ದು ಮಗುವಿನ ಜನ್ಮ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ಯೋಚಿಸಿದ್ದರು. ಆದರೆ ಮಗುವಿನ ಸಾವಿನಿಂದ ಮನೆಯಲ್ಲಿಗ ಸಂಭ್ರಮದ ಬದಲಾಗಿ ಸೂತಕದ ವಾತಾವರಣ ನಿರ್ಮಾಣವಾಗಿ ಸ್ಮಶಾನ ಮೌನ ಆವರಿಸಿದೆ.
ಅಮವಾಸ್ಯೆ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಾಹನ ತೊಳೆಯಲು ಪೂಜೆ ಪುನಸ್ಕಾರದ ಕಡೆ ಗಮನ ಕೊಟ್ಟಿದ್ದರು. ಈ ಸಂದರ್ಭದಲ್ಲಿ ಅಂಬೆಗಾಲು ಇಡುತ್ತಾ ಒಡಾಡುತ್ತಿದ್ದ ಮಗು ತನಗರಿವಿಲ್ಲದಂತೆ ತೊಟ್ಟಿಗೆ ಬಿದ್ದು ಸಾವನ್ನಪ್ಪಿದೆ.
ಸ್ವಲ್ಪ ಹೊತ್ತಿನ ನಂತರ ಮಗುವಿನ ತಾತ ವಾಹನ ತೊಳೆಯಲು ತೊಟ್ಟಿಯಲ್ಲಿ ಬಗ್ಗಿದಾಗ ಮಗುವನ್ನು ಕಂಡು ದಿಗ್ಭ್ರಾಂತರಾಗಿದ್ದಾರೆ. ತಕ್ಷಣ ಶಿಕಾರಿಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದರೂ ಪ್ರಯೋಜನವಾಗಲಿಲ್ಲ.