ಹೊಸದಿಗಂತ ಡಿಜಿಟಲ್ ಡೆಸ್ಕ್:
ತನ್ನ ಪ್ರೀತಿ ಪ್ರಸ್ತಾಪವನ್ನು ಒಪ್ಪಿಕೊಂಡಿಲ್ಲವೆಂದು ವ್ಯಕ್ತಿಯೊಬ್ಬ 19 ವರ್ಷದ ಯುವತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ಜಾರ್ಖಂಡ್ ನ ಧುಮ್ಕಾ ಪ್ರದೇಶದಲ್ಲಿ ನಡೆದಿದೆ.
ಮಂಗಳವಾರ ದುಮ್ಕಾ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಶಾರುಖ್ ಎಂಬಾತ 12ನೇ ತರಗತಿಯ ವಿದ್ಯಾರ್ಥಿನಿ ಮಲಗಿದ್ದಾಗ ಆಕೆಯ ಕೋಣೆಯ ಕಿಟಕಿಯ ಹೊರಗಿನಿಂದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸಾವನ್ನಪ್ಪಿದ್ದಾಳೆ. ಇದರಿಂದ ರೊಚ್ಚಿಗೆದ್ದ ಜನತೆ ಯುವತಿಗೆ ನ್ಯಾ ಕೊಡಿಸುವಂತೆ ವ್ಯಾಪಕವಾಗಿ ಪ್ರತಿಭಟನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್ಪಿಸಿ) ಸೆಕ್ಷನ್ 144 ಜಾರಿ ಮಾಡಿದೆ.
ಭಾರೀ ಭದ್ರತೆಯ ನಡುವೆ ಹದಿಹರೆಯದ ಯುವತಿಯ ಅಂತಿಮ ವಿಧಿ ವಿಧಾನಗಳನ್ನು ಕೈಗೊಳ್ಳಲು ನಿಶ್ಚಯಿಸಲಾಗಿದ್ದು ಬಿಜೆಪಿ ಸಂಸದ ಸುನೀಲ್ ಸೋರೆನ್ ಅಂತಿಮ ವಿಧಿವಿಧಾನದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.