ಹೊಸದಿಗಂತ ವರದಿ ಬೆಳಗಾವಿ:
ಮಹಿಳೆಯೊಬ್ಬಳನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿದೆ.
ವಂಟಮೂರಿ ಗ್ರಾಮದ 42 ವರ್ಷದ ಸಂತ್ರಸ್ತ ಮಹಿಳೆ ತೀವ್ರ ಅಸ್ವಸ್ಥವಾಗಿದ್ದು, ಈ ಘಟನೆ ಇಡೀ ಜಿಲ್ಲೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.
ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದ ಯುವಕ ದುಂಡಪ್ಪ ಅದೇ ಗ್ರಾಮದ ಪ್ರೀತಿ(ಹೆಸರು ಬದಲಿಸಲಾಗಿದೆ)ಯನ್ನು ಪ್ರೀತಿಸುತ್ತಿದ್ದ. ಆದರೆ ಮನೆಯಲ್ಲಿ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ ಸೋಮವಾರವೇ ಅವಳ ನಿಶ್ಚಿತಾರ್ಥ ಇದ್ದ ಹಿನ್ನೆಲೆಯಲ್ಲಿ ದುಂಡಪ್ಪ ಆಕೆಯೊಂದಿಗೆ ರವಿವಾರ ರಾತ್ರಿ ಓಡಿ ಹೋಗಿದ್ದ.
ಪ್ರೀತಿಸಿದ ಈ ಜೋಡಿ ಮನೆ ಬಿಟ್ಟು ಹೋಗಿದ್ದರಿಂದ ರೊಚ್ಚಿಗೆದ್ದ ಯುವತಿ ಮನೆಯವರು ಯುವಕನ ತಾಯಿಗೆ ಅಮಾನವೀಯ ಶಿಕ್ಷೆ ಕೊಟ್ಟಿದ್ದು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ನಿಶ್ಚಿತಾರ್ಥದ ದಿನವೇ ಅವಮಾನ ಅನುಭವಿಸಿದ ಯುವತಿ ಕುಟುಂಬಸ್ಥರು ಯುವಕನ ಮನೆ ಮೇಲೆ ದಾಳಿ ಮಾಡಿ ಮನೆಯನ್ನು ಸಂಪೂರ್ಣ ಧ್ವಂಸಗೊಳಿಸಿದ್ದಾರೆ.
ದುಷ್ಕರ್ಮಿಗಳು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಅಮಾನವೀಯವಾಗಿ ಹಲ್ಲೆ ಮಾಡಿದ್ದಾರೆ.
ತಡರಾತ್ರಿ ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಂಬಂಧ 7 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮುಂಜಾಗೃತಾ ಕ್ರಮವಾಗಿ ಪೋಲೀಸರು ಗ್ರಾಮದಲ್ಲಿ ಎರಡು ಕೆಎಸ್ ಆರ್ ಪಿ ತುಕಡಿ ನಿಯೋಜಿಸಲಾಗಿದೆ.