ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ಟೋಬರ್ 17 ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮತದಾನ ನಡೆಯಲಿರುವ ಹಿನ್ನಲೆಯಲ್ಲಿ ಹಿರಿಯ ನಾಯಕ ಆನಂದ್ ಶರ್ಮಾ ಚುನಾವಣಾ ಪ್ರಕ್ರಿಯೆ ಕುರಿತು ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಿನ್ನೆ ಆನ್ಲೈನ್ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಡಬ್ಲ್ಯುಸಿಡಬ್ಲ್ಯು) ಸಭೆಯಲ್ಲಿ ಅಧ್ಯಕ್ಷರ ಆಯ್ಕೆಯ ಚುನಾವಣಾ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದಿದೆ. ಭಾರತದಾದ್ಯಂತ ಪಿಸಿಸಿ ಕೇಂದ್ರ ಕಚೇರಿಯಲ್ಲಿ ಮತದಾನ ನಡೆಯಲಿದೆ ಎಂದು ಕಾಂಗ್ರೆಸ್ ಹೇಳಿದೆ.
ಇದರಲ್ಲಿ ಸುಮಾರು 9 ಸಾವಿರ ಪ್ರತಿನಿಧಿಗಳು ಮತ ಚಲಾಯಿಸಲಿದ್ದಾರೆ ಎನ್ನಲಾಗಿದೆ. ಆದರೆ ನಿನ್ನೆ ಸಿಡಬ್ಲ್ಯುಸಿ ಸಭೆಯಲ್ಲಿ ಆನಂದ್ ಶರ್ಮಾ, ಅಧ್ಯಕ್ಷರ ಆಯ್ಕೆಗೆ ಮತದಾರರ ಪಟ್ಟಿ ಬಂದಿಲ್ಲ ಎಂದು ಆರೋಪಿಸಿದ್ದಾರೆ. ಪಕ್ಷದ ನಿಯಮಾನುಸಾರ ಚುನಾವಣಾ ಪ್ರಕ್ರಿಯೆ ನಡೆಯಲಿದೆಯೇ? ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಅಧ್ಯಕ್ಷರ ಆಯ್ಕೆಗೆ ಮತದಾರರ ಪಟ್ಟಿ ಬಿಡುಗಡೆ ಮಾಡದಿದ್ದರೆ ಪಾರದರ್ಶಕತೆ ಎಲ್ಲಿದೆ ಎಂದ ಅವರು, ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ನಿಯಮಗಳನ್ನು ಪಕ್ಷ ಉಲ್ಲಂಘಿಸಿದೆ ಎಂದು ಆರೋಪಿಸಿದ್ದಾರೆ.
ಚುನಾವಣೆಗೆ ಅಂತಿಮ ಮತದಾರರ ಪಟ್ಟಿಯನ್ನು ರಚಿಸುವ ಮೊದಲು ಯಾವುದೇ ಸಭೆ ನಡೆಸಲಾಗಿದೆಯೇ? ಎಂದು ಪ್ರಶ್ನಿಸಿರುವುದಾಗಿ ವರದಿಯಾಗಿದೆ. ಚುನಾವಣಾ ಪ್ರಕ್ರಿಯೆ ಬಗ್ಗೆ ಯಾರೂ ಪ್ರಶ್ನೆ ಮಾಡಿಲ್ಲ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ರಾಹುಲ್ ಗಾಂಧಿ ಹಿಂದೇಟು ಹಾಕುತ್ತಿರುವುದರಿಂದ ಪ್ರಿಯಾಂಕಾ ಗಾಂಧಿ ಅಥವಾ ರಾಜಸ್ಥಾನ ಸಿಎಂ ಅಶೋಕ್ ಗಹ್ಲೋಟ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಮುಂದಿನ ತಿಂಗಳು 22ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಧಿಸೂಚನೆ ಹೊರಬೀಳಲಿದೆ. ಮುಂದಿನ ತಿಂಗಳು 24ರಿಂದ 30ರವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಸ್ಪರ್ಧೆಯಲ್ಲಿ ಒಂದಕ್ಕಿಂತ ಹೆಚ್ಚು ನಾಮಪತ್ರಗಳು ಬಂದರೆ ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದೆ. ಅವುಗಳ ಫಲಿತಾಂಶ ಅದೇ ತಿಂಗಳ 19ರಂದು ಪ್ರಕಟವಾಗಲಿದೆ.