ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ದೊಡ್ಡಬೊಮ್ಮನಹಳ್ಳಿ ಗ್ರಾಮದ ಅಂಗನವಾಡಿ ಕಟ್ಟಡದ ಮೇಲ್ಚಾವಣಿಯ ಸಿಮೆಂಟ್ ಪ್ಲಾಸ್ಟಿಂಗ್ ಏಕಾಏಕಿ ಕುಸಿದ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ.
ಘಟನೆ ಬಳಿಕ ಪೋಷಕರಲ್ಲಿ ಆತಂಕ ಉಂಟಾಗಿದ್ದು, ಕಟ್ಟಡದ ಸುರಕ್ಷತೆ ಕುರಿತು ಸ್ಥಳೀಯರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಂಗನವಾಡಿಯಲ್ಲಿ ಪಾಠ ನಡೆಯುತ್ತಿದ್ದ ವೇಳೆ ಅವಘಡ
ದೊಡ್ಡಬೊಮ್ಮನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಪಾಠ ನಡೆಯುತ್ತಿದ್ದ ಸಂದರ್ಭದಲ್ಲಿ ಮೇಲ್ಚಾವಣಿಯ ಸಿಮೆಂಟ್ ಭಾಗ ಕುಸಿದಿದೆ. ಈ ವೇಳೆ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಕಟ್ಟಡದ ಮೇಲ್ಚಾವಣಿ ಮೊದಲೇ ಶಿಥಿಲಗೊಂಡಿದ್ದರೂ ಮಕ್ಕಳನ್ನು ಅಲ್ಲಿಯೇ ಕೂರಿಸಲಾಗಿತ್ತು ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನೂ ಓದಿ:
ಗಾಯಗೊಂಡ ಮಕ್ಕಳಿಗೆ ಚಿಕಿತ್ಸೆ
ಅವಘಡದ ಬಳಿಕ ಗಾಯಗೊಂಡ ಮಕ್ಕಳನ್ನು ತಕ್ಷಣ ಕುರುಬೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಹಿನ್ನೆಲೆಯಲ್ಲಿ ಮಕ್ಕಳನ್ನು ಚಿಂತಾಮಣಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳಿಗೆ ಗಾಯವಾಗಿರುವ ಸುದ್ದಿ ತಿಳಿದು ಪೋಷಕರು ಆಸ್ಪತ್ರೆಗೆ ಧಾವಿಸಿ ಆತಂಕ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳಿಂದ ಅಂಗನವಾಡಿ ಪರಿಶೀಲನೆ
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಅಂಗನವಾಡಿ ಕೇಂದ್ರವನ್ನು ಪರಿಶೀಲಿಸಿದರು. ಗಾಯಗೊಂಡ ಮಕ್ಕಳ ಮನೆಗಳಿಗೂ ತೆರಳಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.



