ಹೊಸ ದಿಗಂತ ವರದಿ, ಅಂಕೋಲಾ:
ತಾಲೂಕಿನಲ್ಲಿ ಎರಡು ದಿನಗಳಿಂದ ಸುರಿದ ಮಳೆಯಿಂದಾಗಿ ಜನಸಾಮಾನ್ಯರು ಸಾಕಷ್ಟು ಸಮಸ್ಯೆ ಎದುರಿಸುವಂತಾಯಿತು.
ಮಳೆಯ ಅಬ್ಬರ ಗುರುವಾರ ರಾತ್ರಿಯಿಂದ ತೀವ್ರ ಸ್ವರೂಪ ಪಡೆದುಕೊಂಡ ಪರಿಣಾಮವಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು.
ಪಟ್ಟಣದ ಜೈಹಿಂದ್ ಮೈದಾನದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ವಿವಿಧ ರೀತಿಯ ಸ್ಟಾಲ್ ಗಳನ್ನು ಹಾಕಿಕೊಂಡಿದ್ದ ವ್ಯಾಪಾರಸ್ಥರು
ರಾತ್ರಿ ಬಾರಿ ಪ್ರಮಾಣದಲ್ಲಿ ಸುರಿದ ಮಳೆಗೆ ಕಂಗಾಲಾಗುವಂತಾಯಿತು.
ಶುಕ್ರವಾರ ಬೆಳಿಗ್ಗೆ ಸಹ ಮಳೆಯ ಆರ್ಭಟ ಮುಂದುವರೆದು ಘಟ್ಟದ ಮೇಲೆ ಗಂಗಾವಳಿ ನದಿ ಪ್ರದೇಶದಲ್ಲಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ಇತ್ತೀಚೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರ ಸಹಾಯದಿಂದ ಸುಮಾರು 20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಹಳವಳ್ಳಿ ಗುಳ್ಳಾಪುರ ಸಂಪರ್ಕಿಸುವ ತಾತ್ಕಾಲಿಕ ಸೇತುವೆಯ ಮೇಲಿಂದ ನೀರು ಹರಿದು ಹೋಗುವಂತ ಪರಿಸ್ಥಿತಿ ನಿರ್ಮಾಣವಾಗಿದ್ದು
ಮುಖ್ಯ ಸೇತುವೆ ನಿರ್ಮಾಣ ಕಾಮಗಾರಿಯನ್ನು ಸಹ ಮಳೆಯಿಂದಾಗಿ ಸ್ಥಗಿತಗೊಳಿಸಲಾಯಿತು.
ಹಳವಳ್ಳಿ ಗುಳ್ಳಾಪುರ ಗ್ರಾಮಗಳ ನಡುವಿನ ಸಂಪರ್ಕ ವ್ಯವಸ್ಥೆ ಕಡಿತಗೊಂಡ ಪರಿಣಾಮ ಗ್ರಾಮಸ್ಥರು ಸಮಸ್ಯೆ ಎದುರಿಸುವಂತಾಯಿತು.
ಶುಕ್ರವಾರ ಬೆಳಿಗ್ಗೆ 11 ಗಂಟೆಯ ನಂತರ ಮಳೆ ನಿಂತಿದ್ದು ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.