ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ 5 ಕೆಜಿ ಅಕ್ಕಿಗೆ ಹಣದ ಬದಲಾಗಿದೆ ಇನ್ನು ಮುಂದೆ ಬೇಳೆ, ಎಣ್ಣೆ ಹಾಗೂ ಸಕ್ಕರೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಎದುರಾದಾಗ ಪ್ರತಿ ಫಲಾನುಭವಿಗೆ ತಿಂಗಳಿಗೆ 10 ಕೆಜಿ ಅಕ್ಕಿ ನೀಡುವ ಭರವಸೆ ನೀಡಿತ್ತು. ಆದರೆ, ಕೇವಲ 5 ಕೆಜಿ ಅಕ್ಕಿ ಮಾತ್ರ ಪೂರೈಸಲು ಸಾಧ್ಯವಾಗಿತ್ತು. ಈ ಹಿನ್ನೆಲೆಯಲ್ಲಿ 5 ಕೆಜಿ ಅಕ್ಕಿಗೆ ಹಣವನ್ನು ಫಲಾನುಭವಿಗಳ ಖಾತೆಗೆ ಹಾಕುತ್ತಿತ್ತು.
ಆದರೆ, ರಾಜ್ಯ ಸರಕಾರ ನಡೆಸಿದ ಸಮೀಕ್ಷೆಯಲ್ಲಿ ಶೇ.93ರಷ್ಟು ಫಲಾನುಭವಿಗಳು ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯ ಬದಲಿಗೆ ಇತರೆ ಅಗತ್ಯ ವಸ್ತುಗಳನ್ನು ಪಡೆಯಲು ಆಸಕ್ತಿ ತೋರಿದ್ದಾರೆಂಬುದು ತಿಳಿದುಬಂದಿತ್ತು.
ಈ ಹಿನ್ನೆಲೆಯಲ್ಲಿ ಹಣದ ಬದಲಿಗೆ ಬೇಳೆ, ಎಣ್ಣೆ ಹಾಗೂ ಸಕ್ಕರೆ ನೀಡುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಸಚಿವ ಮುನಿಯಪ್ಪ ಅವರು ಮಂಗಳವಾರ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿ ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಒದಗಿಸುವಂತ ಮನವಿ ಮಾಡಿಕೊಂಡರು.