April 18, 2026
Saturday, April 18, 2026
spot_img

ಆಟೋ-ಕ್ಯಾಬ್ ಚಾಲಕರಿಗೆ ಕನ್ನಡ ಕಡ್ಡಾಯವಾಗಲಿ: ಸಿಎಂಗೆ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಭಾಷಾ ಪ್ರಶ್ನೆ ಮತ್ತೆ ಚರ್ಚೆಗೆ ಬಂದಿದ್ದು, ಆಟೋ ಮತ್ತು ಕ್ಯಾಬ್ ಚಾಲಕರಿಗೆ ಕನ್ನಡ ತಿಳಿದಿರಬೇಕು ಎಂಬ ಬೇಡಿಕೆ ಜೋರಾಗಿದೆ. ಈ ಕುರಿತು ಕೆಪಿಸಿಸಿ ವಕ್ತಾರ ಎ.ಎನ್. ನಟರಾಜ್ ಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ವಿಶೇಷ ಮನವಿ ಸಲ್ಲಿಸಿದ್ದಾರೆ.

ಪತ್ರದಲ್ಲಿ, ಮಹಾರಾಷ್ಟ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿದ ನಿಯಮವನ್ನು ಉದಾಹರಣೆಯಾಗಿ ಉಲ್ಲೇಖಿಸಲಾಗಿದೆ. ಮೇ 1ರಿಂದ ಅಲ್ಲಿ ವಾಣಿಜ್ಯ ವಾಹನ ಚಾಲಕರು ಪರವಾನಗಿ ಪಡೆಯಲು ಸ್ಥಳೀಯ ಭಾಷೆಯಾದ ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು ಎಂಬ ನಿಯಮವನ್ನು ಅನುಸರಿಸುವಂತೆ ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ:

ಬೆಂಗಳೂರು ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಹೊರರಾಜ್ಯದ ಚಾಲಕರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಕನ್ನಡ ತಿಳಿಯದ ಕಾರಣ ಸ್ಥಳೀಯರಿಗೆ ಸಂವಹನ ಸಮಸ್ಯೆಗಳು ಎದುರಾಗುತ್ತಿವೆ ಎಂಬುದು ಅವರ ಅಭಿಪ್ರಾಯ. ಕ್ಯಾಬ್ ಮತ್ತು ಆಟೋ ಸೇವೆಗಳಲ್ಲಿ ಭಾಷಾ ಅಡಚಣೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ಘಟನೆಗಳು ಹೆಚ್ಚುತ್ತಿರುವುದಾಗಿ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಕನ್ನಡ ಕಲಿಯಲು ನಿರಾಕರಿಸುವ ಚಾಲಕರ ವಾಣಿಜ್ಯ ಪರವಾನಗಿಯನ್ನು ಅಮಾನತು ಅಥವಾ ರದ್ದುಪಡಿಸುವಂತಹ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಜೊತೆಗೆ, ನಿಯಮ ಉಲ್ಲಂಘನೆ ಮಾಡಿ ಪರವಾನಗಿ ನೀಡುವ ಅಧಿಕಾರಿಗಳ ವಿರುದ್ಧವೂ ಶಿಸ್ತು ಕ್ರಮ ಜರುಗಿಸಬೇಕು ಎಂದು ಸೂಚಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !