ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ದೇಶೀಯ ಉತ್ಪನ್ನಗಳಿಗೆ ಬೆಂಬಲ ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಖಾದಿ ಮತ್ತು ಗ್ರಾಮೋದ್ಯೋಗ ವಲಯಕ್ಕೆ ಆರ್ಥಿಕ ಶಕ್ತಿ ನೀಡುವ ಉದ್ದೇಶದಿಂದ ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ಹೊಸ ಉಡುಪು ಮಾರ್ಗಸೂಚಿ ಜಾರಿಗೊಳಿಸಲಾಗಿದೆ.
ಕರ್ನಾಟಕ ಸರ್ಕಾರದ ಆದೇಶದಂತೆ, ಇನ್ನುಮುಂದೆ ಪ್ರತಿ ತಿಂಗಳ ಮೊದಲ ಶನಿವಾರ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಕಡ್ಡಾಯವಾಗಿ ಖಾದಿ ಉಡುಪು ಧರಿಸಿ ಕಚೇರಿಗೆ ಹಾಜರಾಗಬೇಕು. ಈ ನಿಯಮವು ರಾಜ್ಯದ ಎಲ್ಲ ಇಲಾಖೆಗಳಿಗೆ, ಮಂಡಳಿಗಳಿಗೆ, ನಿಗಮಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಅನ್ವಯವಾಗಲಿದೆ.
ಇದನ್ನೂ ಓದಿ:
ಖಾದಿ ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸುವುದು ಹಾಗೂ ಗ್ರಾಮೀಣ ಕೈಗಾರಿಕೆಗಳಿಗೆ ಆರ್ಥಿಕ ಬೆಂಬಲ ಒದಗಿಸುವುದೇ ಈ ನಿರ್ಧಾರದ ಪ್ರಮುಖ ಗುರಿಯಾಗಿದೆ.
ಈ ಯೋಜನೆಗೆ ಅಧಿಕೃತ ಚಾಲನೆ ಏಪ್ರಿಲ್ 21, 2026ರಂದು, ಸರ್ಕಾರಿ ನೌಕರರ ದಿನಾಚರಣೆಯಂದು ದೊರೆಯಲಿದೆ. ಇನ್ನೊಂದೆಡೆ, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದಿಂದ ರೇಷ್ಮೆ ಸೀರೆ ಮತ್ತು ಬಟ್ಟೆಗಳ ಮೇಲೆ ನೌಕರರಿಗೆ ವಿಶೇಷ ರಿಯಾಯಿತಿ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಕ್ರಮದಿಂದ ರಾಜ್ಯದ ನೇಕಾರರು ಹಾಗೂ ಖಾದಿ ಕ್ಷೇತ್ರಕ್ಕೆ ಹೊಸ ಉತ್ತೇಜನ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.



