August 29, 2026
Saturday, August 29, 2026
spot_img

ಕೊಲ್ಲೂರು ಮೂಕಾಂಬಿಕಾ ದರುಶನಕ್ಕೆ ಹೋಗ್ತಿದ್ದೀರಾ? ಜೂನ್ 12ರ ಈ ಸಮಯ ನೆನಪಿರಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್ 12ರ ಶುಕ್ರವಾರದಂದು ಪ್ರಸಿದ್ಧ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಸಿಎಂ ಭೇಟಿಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಿದೆ.

ದರ್ಶನ ಸಮಯದ ಪ್ರಮುಖ ಮಾಹಿತಿ:

ಮುಖ್ಯಮಂತ್ರಿಗಳ ಭೇಟಿಯ ಭದ್ರತಾ ಕಾರಣಗಳಿಂದಾಗಿ, ಶುಕ್ರವಾರ ಮಧ್ಯಾಹ್ನ 12:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಸಾರ್ವಜನಿಕ ಹಾಗೂ ಸಾಮಾನ್ಯ ಭಕ್ತಾದಿಗಳಿಗೆ ದೇವಿಯ ದರ್ಶನವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಈ ಸಮಯದಲ್ಲಿ ಭಕ್ತರು ದೇವಸ್ಥಾನಕ್ಕೆ ಬರುವುದನ್ನು ತಪ್ಪಿಸುವುದು ಸೂಕ್ತ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಸೂಚನೆಗಳು:

ಮುಖ್ಯಮಂತ್ರಿಗಳ ಕಾನ್ವಾಯ್ ಸಂಚರಿಸುವ ಮಾರ್ಗ, ಪ್ರವೇಶ ದ್ವಾರ ಹಾಗೂ ದೇವಸ್ಥಾನದ ಆವರಣದಲ್ಲಿ ಸಾರ್ವಜನಿಕರು ಗುಂಪು ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಸಿಎಂ ವಿಜಯ್ ಅವರು ಕೇವಲ ಮೂಕಾಂಬಿಕಾ ದೇವಿಯ ದರ್ಶನ ಮುಗಿಸಿ ತಕ್ಷಣವೇ ಹಿಂತಿರುಗಲಿದ್ದು, ಯಾವುದೇ ಸಾರ್ವಜನಿಕ ಭೇಟಿ ಅಥವಾ ಕಾರ್ಯಕ್ರಮಗಳು ಇರುವುದಿಲ್ಲ.

ದರ್ಶನದ ಸಮಯದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದ್ದು, ಭಕ್ತಾದಿಗಳು ಮತ್ತು ಸ್ಥಳೀಯ ನಾಗರಿಕರು ಪೊಲೀಸ್ ಸಿಬ್ಬಂದಿಯೊಂದಿಗೆ ಸಹಕರಿಸಬೇಕಾಗಿ ಉಡುಪಿ ಜಿಲ್ಲಾ ಪೊಲೀಸರು ವಿನಂತಿಸಿದ್ದಾರೆ. ಕೊಲ್ಲೂರು ಪ್ರವಾಸ ಕೈಗೊಳ್ಳುವ ಮುನ್ನ ಭಕ್ತರು ಈ ಸಮಯದ ಬದಲಾವಣೆಯನ್ನು ಗಮನಿಸುವುದು ಉತ್ತಮ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !