ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಜ್ಯಸಭೆಗೆ ಕರ್ನಾಟಕದಿಂದ ಸ್ಪರ್ಧಿಸಿರುವ ಮೂರೂ ಅಭ್ಯರ್ಥಿಗಳು ವಿಜೇತರಾಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಆದ್ಯತೆ ಕೊಟ್ಟಿದೆ. ಕೇಂದ್ರದ ಬಿಜೆಪಿ ಸರ್ಕಾರ ಮತ್ತು ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಮಾಡಿದ ಉತ್ತಮ ಕಾರ್ಯಗಳನ್ನು ಗಮನದಲ್ಲಿಟ್ಟುಕೊಂಡು ಶಾಸಕರು ಬಿಜೆಪಿ ಪರವಾಗಿ ಮತ ಚಲಾಯಿಸಲಿದ್ದಾರೆ ಎಂದು ಹೇಳಿದರು.
ಪ್ರಧಾನಿಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ 8 ವರ್ಷಗಳನ್ನು ಪೂರೈಸಿದೆ. ಈ ಹಿನ್ನೆಲೆ ಬಿಜೆಪಿ ವತಿಯಿಂದ 15 ದಿನಗಳ ಕಾಲ ಮೋದಿಯವರ ಸಾಧನೆಯನ್ನು ಜನರಿಗೆ ತಿಳಿಸುವ ಅಭಿಯಾನವನ್ನು ನಡೆಸಲಾಗುತ್ತಿದೆ. ಪ್ರತಿ ಗ್ರಾಮದ ಪ್ರತಿಯೊಂದು ಮನೆಯನ್ನು ಸಂಪರ್ಕಿಸಿ ಸಾಧನೆಯನ್ನು ತಿಳಿಸುವ ಕಾರ್ಯ ನಡೆಯುತ್ತಿದೆ. ಇದರ ಜೊತೆಗೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರದ ಸಾಧನೆಗಳು ಮತ್ತು ಯೋಜನೆಗಳ ಕುರಿತಾದ ಮಾಹಿತಿಗಳನ್ನು ಜನರಿಗೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.