ಹೊಸ ದಿಗಂತ ಡಿಜಿಟಲ್ ಡೆಸ್ಕ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ‘ಮೇಕ್ ಇಂಡಿಯಾ ನಂಬರ್ 1’ ಮಿಷನ್ಗೆ ಚಾಲನೆ ನೀಡಿದ್ದಾರೆ. ಈ ಮೂಲಕ ಭಾರತವನ್ನು ವಿಶ್ವದ ನಂಬರ್ ಒನ್ ದೇಶವನ್ನಾಗಿ ಮಾಡುವ ಗುರಿ ಹೊಂದಿದ್ದು, ಅದಕ್ಕೆ ನಾಗರಿಕರು ಹಾಗೂ ರಾಜಕೀಯ ಪಕ್ಷಗಳು ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.
ಇನ್ನು ಈ ಮಿಷನ್ನಲ್ಲಿ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಇತರೆ ರಾಜಕೀಯ ಪಕ್ಷಗಳು ಭಾಗಿಯಾಗಲು ಕೇಜ್ರಿವಾಲ್ ಕರೆ ನೀಡಿದ್ದಾರೆ.
ಇಲ್ಲಿ ಉಚಿತ ಶಿಕ್ಷಣ, ಆರೋಗ್ಯ ಸೇವೆ, ಯುವಕರಿಗೆ ಉದ್ಯೋಗ, ಮಹಿಳೆಯರಿಗೆ ಸಮಾನ ಹಕ್ಕು, ರೈತರ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ನೀಡುವುದು ಮುಖ್ಯ ಉದ್ದೇಶವಾಗಿದೆ.
ದೆಹಲಿಯಲ್ಲಿ ಮಾತನಾಡಿರುವ ಕೇಜ್ರಿವಾಲ್, ಮಹಿಳೆಯರಿಗೆ ಸಮಾನ ಹಕ್ಕು, ಘನತೆ ಮತ್ತು ರೈತರ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗುವಂತೆ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.
ಪ್ರತಿ ಮಗು ಶಿಕ್ಷಣ ಪಡೆಯುವುದು ನಮ್ಮ ಆದ್ಯ ಕರ್ತವ್ಯ. ಇದರ ಜೊತೆಗೆ ಪ್ರತಿಯೊಬ್ಬ ನಾಗರಿಕನಿಗೆ ಉತ್ತಮ ಮತ್ತು ಉಚಿತ ಆರೋಗ್ಯ ಸೇವೆ ಸಿಗುವಂತೆ ಮಾಡಬೇಕು, ಯುವಕರು ಉದ್ಯೋಗ ಸಿಗುವಂತೆ ಮಾಡಬೇಕಾಗಿದೆ ಎಂದರು.
ನಾವು ಹಮ್ಮಿಕೊಂಡಿರುವ ಮಿಷನ್ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸಲು ದೇಶಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಕೇಜ್ರಿವಾಲ್ ತಿಳಿಸಿದ್ದು, ಮೇಕ್ ಇಂಡಿಯಾ ನಂಬರ್ 1 ಕೇವಲ ರಾಜಕೀಯ ಪಕ್ಷವೊಂದರ ಧ್ಯೇಯವಲ್ಲ. ಬದಲಾಗಿ ರಾಷ್ಟ್ರೀಯ ಧ್ಯೇಯವಾಗಿದೆ . ನಮಗೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿವೆ. ಈ ಸಮಯದಲ್ಲಿ ಸಾಕಷ್ಟು ಸಾಧಿಸಿದ್ದೇವೆ. ಆದರೆ. ಭಾರತದ ನಂತರ ಸ್ವಾತಂತ್ರ್ಯ ಪಡೆದುಕೊಂಡಿರುವ ಕೆಲವೊಂದು ದೇಶಗಳು ಸಾಕಷ್ಟು ಸಾಧನೆ ಮಾಡಿವೆ ಎಂದು ಸಿಂಗಾಪುರದ ಉದಾಹರಣೆ ನೀಡಿದರು.