ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮಾಜಿ ಸಚಿವ ಅಶ್ವತ್ಥನಾರಾಯಣ (CN Ashwath Narayan) ಅವರನ್ನು ನೇಣುಗಂಬಕ್ಕೆ ಹಾಕಬೇಕು ಎಂದು ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ (Veerappa Moily) ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಶೈಕ್ಷಣಿಕ ವ್ಯವಸ್ಥೆಯನ್ನು ಅಶ್ವತ್ಥನಾರಾಯಣ ಸಂಪೂರ್ಣ ಹಾಳು ಮಾಡಿದ್ದಾರೆ. ಸರ್ಕಾರಿ ಸ್ವಾಮ್ಯದ 41 ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರನ್ನು ನೇಮಕ ಮಾಡಿಲ್ಲ. ಇದರಿಂದ ಶೈಕ್ಷಣಿಕ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ. ಸರ್ಕಾರಿ ವಿವಿಗಳ ವಿದ್ಯಾರ್ಥಿಗಳ ಗುಣಮಟ್ಟದ ಬಗ್ಗೆ ಅನುಮಾನಪಡುವಂತೆ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.
ವಿವಿಗಳಲ್ಲಿ ಮೂಲಭೂತ ಸೌಕರ್ಯ, ಉಪನ್ಯಾಸಕರು ಹಾಗೂ ಸಿಬ್ಬಂದಿಗಳ ನೇಮಕ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ. ಸರ್ಕಾರಿ ಸ್ವಾಮ್ಯದ ವಿವಿಗಳಲ್ಲಿ ತಕ್ಷಣ ಉಪನ್ಯಾಸಕರ ನೇಮಕ್ಕೆ ಆಗ್ರಹ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಬಿಜೆಪಿ ಶ್ರೀಮಂತ ಪರ ಇರೋ ಪಕ್ಷ. ಕಾಂಗ್ರೆಸ್ ಬಡವರ ಪರ ಇರೋ ಪಕ್ಷ. ಬಿಜೆಪಿಗರು ದೇಶಭಕ್ತರಲ್ಲ ದೇಶ ದ್ರೋಹಿಗಳು. ಮೋದಿ ಯಾವಾಗ ಏನು ಮಹಾಕಾರ್ಯ ಮಾಡಿದ್ದಾರೆ ಹೇಳಿ? ಅವರು ದೇಶವನ್ನು ಮುನ್ನೆಡೆಸುವುದಲ್ಲ ಹಿಂದೆ ನೂಕುತ್ತಿದ್ದಾರೆ ಎಂದು ಮೊಯ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಚ್ಡಿ ಕುಮಾರಸ್ವಾಮಿ ಪೆನ್ ಡ್ರೈವ್ನಲ್ಲಿ ಇರುವುದು ಬಾಂಬ್ ಅಲ್ಲ ಟುಸ್ ಪಟಾಕಿ ಎಂದು ಮೊಯ್ಲಿ ವ್ಯಂಗ್ಯವಾಡಿದ್ದಾರೆ. ಕುಮಾರಸ್ವಾಮಿ ಈ ರೀತಿ ಹಲವು ಬಾರಿ ನಡೆದುಕೊಂಡಿದ್ದಾರೆ. ಅವರು ಬಿಜೆಪಿ ಜೊತೆ ಸೇರಿ ಈ ರೀತಿ ವರ್ತಿಸುತ್ತಿದ್ದಾರೆ. ಚುನಾವಣೆಯ ಸೋಲಿನ ಹತಾಷೆಯಿಂದ ಜನರ ಗಮನ ಸೆಳೆಯಲು ಈ ರೀತಿ ಮಾಡುತ್ತಿದ್ದಾರೆ ಎಂದು ಮೊಯ್ಲಿ ಹೇಳಿದ್ದಾರೆ.