ಹೊಸ ದಿಗಂತ ವರದಿ, ಬೆಂಗಳೂರು:
2023ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದೆ. ಬಿಜೆಪಿ 150 ಸೀಟುಗಳನ್ನು ಗೆಲ್ಲುವ ಬಗ್ಗೆ ನಾಳೆ ನಡೆಯುವ ರಾಜ್ಯ ಕಾರ್ಯಕಾರಣಿಯಲ್ಲಿ ಚರ್ಚೆ ಮಾಡಲಿದ್ದೇವೆ. ಗೆಲುವಿಗೆ ರೋಡ್ ಮ್ಯಾಪ್ ತಯಾರಿಸಲಿದ್ದೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು.
ನಗರದಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಭ್ರಷ್ಟರ ಪಕ್ಷ, ಷಡ್ಯಂತ್ರಗಳ ಪಕ್ಷ ಎಂದು ಟೀಕಿಸಿದರು. ಶಾಸಕ ಯತ್ನಾಳ್ ಹೇಳಿಕೆ ವಿಚಾರದ ಪ್ರಶ್ನೆಗೆ ಉತ್ತರಿಸಿದ ಅವರು, ಯತ್ನಾಳ್ ಇದೇ ಮೊದಲಬಾರಿ ಹೇಳಿಕೆ ನೀಡಿಲ್ಲ. ಯತ್ನಾಳ್ ಹೇಳಿಕೆಯನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಅವರ ಹೇಳಿಕೆ ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಉತ್ತರ ನೀಡಿದರು.
ಕರ್ನಾಟಕದಲ್ಲಿ ರಾಹುಲ್ ಗಾಂಧಿ ಯಾತ್ರೆ ನಡೆಯುತ್ತಿದೆ. ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಆರೋಪ ಮಾಡೋದು ಅವರ ಕೆಲಸ. ಕೇವಲ ಆರೋಪ ಮಾಡಲು ಇಡೀ ಯಾತ್ರೆ ಮಾಡುತ್ತಿದ್ದಾರೆ. ಆದರೂ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನೆಲಕಚ್ಚಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಸವರಾಜ ಬೊಮ್ಮಾಯಿ ಅವರು ರೈತರ ಮಕ್ಕಳಿಗೆ ಶಿಕ್ಷಣಕ್ಕೆ ಧನಸಹಾಯ ಮಾಡಿದ್ದಾರೆ. ಬಡವರ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದಾರೆ. ಬೊಮ್ಮಾಯಿ ಬಡವರ, ರೈತರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಸಮಗ್ರ ಅಭಿವೃದ್ಧಿಯ ಚಿಂತನೆಯೊಂದಿಗೆ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಬೊಮ್ಮಾಯಿ ಅವರು ರಾಜಕೀಯ ಇತಿಹಾಸದಲ್ಲಿ ಅನೇಕ ಸಚಿವ ಸ್ಥಾನ ನಿಭಾಯಿಸಿದ್ದಾರೆ. ಆದರೆ, ಎಂದೂ ಅವರ ಮೇಲೆ ಆರೋಪ ಬಂದಿಲ್ಲ. ಅವರ ಮೇಲೆ ಆರೋಪ ಮಾಡೋದು ಸರಿಯಲ್ಲ ಎಂದ ಅವರು, 2023ರ ವೇಳೆಗೆ ಕಾಂಗ್ರೆಸ್ ಸಂಪೂರ್ಣ ನೆಲ ಕಚ್ಚಲಿದೆ ಎಂದು ನುಡಿದರು.
ಆರೆಸ್ಸೆಸ್ ಹಿರಿಯ ಮುಖಂಡ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಿ ಮೋದಿಜಿ ಅವರ ಆಡಳಿತದಲ್ಲಿ ನಿರಂತರವಾಗಿ ಉದ್ಯೋಗ ಸೃಷ್ಟಿ ಮಾಡಲಾಗುತ್ತಿದೆ. ಸ್ಟಾರ್ಟಪ್ ಗಳಿಗೆ ಉತ್ತೇಜನ ಕೊಡಲಾಗುತ್ತಿದೆ. ಭಾರತವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ ಎಂದು ತಿಳಿಸಿದರು.
40% ಭ್ರಷ್ಟಾಚಾರ ಆರೋಪ ಮಾಡುತ್ತಿರುವ ಕಾಂಗ್ರೆಸ್ ಮುಖಂಡರು ಆ ಕುರಿತು ದಾಖಲೆಗಳಿದ್ದರೆ ಲೋಕಾಯುಕ್ತಕ್ಕೆ ದಾಖಲೆ ನೀಡಲಿ. ಲೋಕಾಯುಕ್ತ ಇರುವಾಗ ನ್ಯಾಯಾಂಗ ತನಿಖೆ ಯಾಕೆ.? ಎಂದು ಕೇಳಿದರು. ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆ ವಿಚಾರವು ಆ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ಯಾವುದೇ ಚರ್ಚೆ ಮಾಡಲು ಬಯಸುವುದಿಲ್ಲ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.