ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಯುವಜನರನ್ನು ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡುವ ನಿಟ್ಟಿನಲ್ಲಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇನ್ನೂ 10 ಲ್ಯಾಂಗ್ವೇಜ್ ಲ್ಯಾಬ್ ಗಳನ್ನು ಸ್ಥಾಪಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಮತ್ತು ಸ್ಥಳೀಯ ಶಾಸಕ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಮಲ್ಲೇಶ್ವರಂ 18ನೇ ಅಡ್ಡರಸ್ತೆಯಲ್ಲಿ ಇರುವ ಸರಕಾರಿ ಪದವಿಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕದಲ್ಲಿ ಉದ್ಯೋಗ ಅವಕಾಶಗಳಿಗೆ ಕೊರತೆ ಇಲ್ಲ. ಮುಖ್ಯಮಂತ್ರಿಗಳ ಮತ್ತು ಪ್ರಧಾನ ಮಂತ್ರಿಗಳ ಕೌಶಲ್ಯ ವಿಕಾಸ ಯೋಜನೆಯಡಿ 18ರಿಂದ 35 ವರ್ಷಗಳ ಒಳಗಿನ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕೊಟ್ಟು, ಉದ್ಯೋಗಗಳಿಗೆ ಸಜ್ಜುಗೊಳಿಸಲಾಗುತ್ತಿದೆ ಎಂದರು.
ಸ್ಕಿಲ್ ಪೋರ್ಟಲ್ ವೇದಿಕೆಯಲ್ಲಿ ಈಗಾಗಲೇ 250 ಕಂಪನಿಗಳು ನೋಂದಣಿ ಆಗಿವೆ. ಹಾಗೆಯೇ ಸ್ಕಿಲ್ ಕನೆಕ್ಟ್ ಉಪಕ್ರಮದಡಿ 25 ಸಾವಿರ ಉದ್ಯೋಗ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದು ಅವರು ನುಡಿದರು.
ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ, ನಿಗಮದ ಕಾರ್ಯನಿರ್ವಾಹಕ ನಿರ್ದೇಶಕ ಕೃಷ್ಣಮೂರ್ತಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರತಿಭಾ, ಉಪನಿರ್ದೇಶಕ ಶ್ರೀರಾಮ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.