ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ ರಾಜಧಾನಿ ರಾಂಚಿಯ ನಿವಾರಣಪುರ ಪ್ರದೇಶದಲ್ಲಿರುವ ಆರ್ಎಸ್ಎಸ್ ಕಚೇರಿ ಮೇಲೆ ನಿನ್ನೆ ತಡರಾತ್ರಿ ಪೆಟ್ರೋಲ್ ಬಾಂಬ್ ಎಸೆಯಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
ಸಿಸಿಟಿವಿಯಲ್ಲಿ ಈ ದೃಶ್ಯಾವಳಿಗಳು ಕಾಣಸಿಕ್ಕಿದ್ದು, ಇಬ್ಬರು ಯುವಕರು ತಡರಾತ್ರಿ 12:36ರ ಸುಮಾರಿಗೆ ಸಂಘದ ಕಚೇರಿ ಬಳಿ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕರು ಆತಂಕ ವ್ಯಕ್ತಪಡಿಸಿದ್ದು, ದೊಡ್ಡ ಸಂಚಿನ ಭಾಗವಾಗಿರಬಹುದು ಎಂದಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿದ ನಗರ ಉಪ ಪೊಲೀಸ್ ಅಧೀಕ್ಷಕ ಕೆ.ವಿ. ರಮಣ್, ಸ್ಥಳದಿಂದ ಎರಡು ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಪರಿಶೀಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಸೈಬರ್ ಡಿಎಸ್ಪಿ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ತನಿಖೆಗೆ ನಿಯೋಜಿಸಲಾಗಿದ್ದು, ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.



