ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ನಿಕಿತಾ ಸಿಂಘಾನಿಯಾ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ಸೋಮವಾರ ನಿರಾಕರಿಸಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ನಿಕಿತಾ ಸಿಂಘಾನಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರು, ಅರ್ಜಿದಾರರ ವಿರುದ್ಧ ದಾಖಲಿಸಿರುವ ದೂರು ಸಮರ್ಥನೀಯವಾಗಿದೆ. ಮೇಲ್ನೋಟಕ್ಕೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಂಶಗಳಿವೆ ಎಂದು ಹೇಳಿದ್ದಾರೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ವಿಚಾರಣಾಧೀನ ನ್ಯಾಯಾಲಯವು ಕಳೆದ ಶನಿವಾರ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಆತ್ಮಹತ್ಯೆಗೆ ಪ್ರಚೋದನೆಯಡಿ ಪ್ರಕರಣ ದಾಖಲಿಸಲು ಯಾವುದೇ ಅಂಶಗಳು ಇಲ್ಲ. ಆರೋಪಿಗಳನ್ನು ಬಂಧಿಸುವುದಕ್ಕೆ ಆಧಾರಗಳನ್ನೂ ಪೊಲೀಸರು ನೀಡಿಲ್ಲ. ಹೀಗಾಗಿ, ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದರು.
ಆದ್ರೆ ಕೋರ್ಟ್, ಎಫ್ಐಆರ್ ಓದಿದರೆ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಎಲ್ಲ ಅಂಶಗಳು ಸ್ಪಷ್ಟವಾಗಿವೆ. ನನ್ನ ಪ್ರಕಾರ ಎಲ್ಲಾ ವಿವರಗಳನ್ನು ನೀಡಲಾಗಿದೆ. ಎಫ್ಐಆರ್ನಲ್ಲಿ ಇದಕ್ಕಿಂತ ಇನ್ನೂ ಹೆಚ್ಚಿನದನ್ನು ಏನು ಕೊಡಲಾಗುತ್ತದೆ? ಎಂದು ಪ್ರಶ್ನಿಸಿತು.
ಅಪರಾಧದ ಪ್ರಾಥಮಿಕ ಅಂಶಗಳನ್ನು ದೂರಿನಲ್ಲಿ ಮಾಡಲಾಗಿದೆ. ಆದರೂ ತನಿಖೆ ಮಾಡಲು ನೀವು ಏಕೆ ಬಯಸುವುದಿಲ್ಲ ? ಎಂದು ಪೀಠ ಸಿಂಘಾನಿಯಾ ಅವರನ್ನು ಪ್ರಶ್ನಿಸಿತು.
ಈ ಕುರಿತು ತನಿಖೆ ನಡೆಯುತ್ತಿದೆಯೇ? ಏನೆಲ್ಲಾ ದಾಖಲೆಗಳನ್ನು ಸಂಗ್ರಹಿಸಲಾಗಿದೆ? ಡೆತ್ನೋಟ್, ಆತ್ಮಹತ್ಯೆ ವಿಡಿಯೋ ಸಂಗ್ರಹಿಸಲಾಗಿದೆಯೇ? ಎಂದು ಸರ್ಕಾರಿ ವಕೀಲರಿಗೆ ಪೀಠ ಪ್ರಶ್ನಿಸಿತು.
ಈ ವೇಳೆ, ಸರ್ಕಾರಿ ವಕೀಲರು ತನಿಖೆ ಪ್ರಗತಿಯಲ್ಲಿದೆ ಎಂದರು. ಆಗ ಪೀಠವು ತನಿಖೆಯ ಸಂದರ್ಭದಲ್ಲಿ ಸಂಗ್ರಹಿಸಿರುವ ದಾಖಲೆಗಳನ್ನು ಸಲ್ಲಿಸಬೇಕು. ಜೊತೆಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಜನವರಿ 21ಕ್ಕೆ ಮುಂದೂಡಿತು.