ಹೊಸದಿಗಂತ ಡಿಜಿಟಲ್ ಡೆಸ್ಕ್
ಅಯೋಧ್ಯೆ: ಉತ್ತರ ಪ್ರದೇಶ ರಾಜ್ಯ ಪ್ರವಾಸದಲ್ಲಿರುವ ಭಾರತದ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಶುಕ್ರವಾರ ರಾಮನಗರಿ ಅಯೋಧ್ಯೆಗೆ ಭೇಟಿ ನೀಡಿದರು. ಶ್ರೀರಾಮ ಜನ್ಮಭೂಮಿ ಸಂಕೀರ್ಣದಲ್ಲಿರುವ ತಾತ್ಕಾಲಿಕ ಗುಡಿಯಲ್ಲಿ ರಾಮಲಲ್ಲಾರ ದರ್ಶನ ಪಡೆದು, ಮಂದಿರದ ಗರ್ಭಗೃಹ ಸ್ಥಳದಲ್ಲಿ ವಿಶೇಷ ಪೂಜೆ ನೆರವೇರಿಸಿದರು.
ಬಳಿಕ ಶ್ರೀರಾಮ ಜನ್ಮಭೂಮಿಯಲ್ಲಿ ನಡೆಯುತ್ತಿರುವ ಮಂದಿರ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಕಾಮಗಾರಿಯ ಕುರಿತು ಮಾಹಿತಿ ನೀಡಿದರು.
ಈ ವೇಳೆ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್, ವೆಂಕಯ್ಯ ನಾಯ್ಡು ಅವರ ಪತ್ನಿ ಉಷಾ ನಾಯ್ಡು, ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ, ಮಂದಿರ ನಿರ್ಮಾಣದ ಉಸ್ತುವಾರಿ ಗೋಪಾಲ ಎಂ. ಮೊದಲಾದವರಿದ್ದರು.
ಮಂದಿರ ನಿರ್ಮಾಣ ಸ್ಥಳದಲ್ಲಿ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರು ಹಾಗೂ ಇಂಜಿನಿಯರ್ಗಳ ತಂಡ ಉಪರಾಷ್ಟ್ರಪತಿಗಳ ಜೊತೆಯಲ್ಲಿ ಫೋಟೋ ತೆಗೆಸಿಕೊಂಡು ಖುಷಿಪಟ್ಟರು.