ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಇಂದು ಪದಗ್ರಹಣ ಮಾಡಲಿದ್ದಾರೆ. ಬೆಳಗ್ಗೆ 10ಗಂಟೆಗೆ ಮಲ್ಲೇಶ್ವರಂನ ಬಿಜೆಪಿ ಕಚೇರಿ ʻಜಗನ್ನಾಥ ಭವನʼದಲ್ಲಿ ವಿಜಯೇಂದ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
9.45ಕ್ಕೆ ಜಗನ್ನಾಥ ಭವನದಲ್ಲಿ ವಿಜಯೇಂದ್ರ ಅವರಿಗೆ ಪೂರ್ಣಕುಂಭ ಸ್ವಾಗತ ಕೋರಲಾಗುತ್ತದೆ. ಬಳಿಕ ನೂತನ ರಾಜ್ಯಾಧ್ಯಕ್ಷರಿಂದ ಗೋಪೂಜೆ ನೆರವೇರಿಸಲಿದ್ದಾರೆ. ಗಣಪತಿ ಹೋಮದ ಪೂರ್ಣಾಹುತಿ ನಂತರ ನಳಿನ್ ಕುಮಾರ್ ಕಟೀಲ್ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.
ಬಿಜೆಪಿ ಪಾಳಯದಲ್ಲಿ ಮನೆ ಮಾಡಿದ ಸಂಭ್ರಮ
ನೂತನ ರಾಜ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಿಂದಾಗಿ ಕಮಲ ಪಾಳಯದಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ. ಮಲ್ಲೇಶ್ವರಂನ ಬಿಜೆಪಿ ಕಚೇರಿಯುದ್ಧಕ್ಕೂ ಬಿಜೆಪಿ ಬಾವುಟಗಳದ್ದೇ ಕಾರುಬಾರು. ಇನ್ನು ನಿನ್ನೆ ರಾತ್ರಿಯಿಂದಲೇ ಜಗನ್ನಾಥ ಭವನದಲ್ಲಿ ಹೋಮ-ಹವನಗಳು ನಡೆಯುತ್ತಿವೆ. ಬಗೆಬಗೆಯ ಹೂಗಳು, ತಳಿರು ತೋರಣಗಳಿಂದ ಜಗನ್ನಾಥ ಭವನ ಸಿಂಗಾರಗೊಂಡಿದೆ. ಎಲ್ಲೆಲ್ಲೂ ವಿಜಯೇಂದ್ರ ಭಾವಚಿತ್ರವಿರುವ ಬ್ಯಾನರ್ಗಳೇ ಕಾಣುತ್ತಿವೆ.