ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಮತ್ತೆ ಹಿನ್ನೆಡೆಯಾಗಿದ್ದು, ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಬೆನ್ನಲ್ಲೇ, ಅವರಿಗೆ ನೀಡಲಾಗಿದ್ದ ವೈಯಕ್ತಿಕ ಸಿಬ್ಬಂದಿಯನ್ನು ಕೇರಳ ಸರ್ಕಾರ (Kerala Government) ಹಿಂಪಡೆದಿದೆ.
ವಯನಾಡ್ ಕ್ಷೇತ್ರದ ಸಂಸದರಾಗಿದ್ದ ರಾಹುಲ್ ಗಾಂಧಿ ಅವರ ಆಪ್ತ ಸಹಾಯಕ ಮತ್ತು ಚಾಲಕರನ್ನು ಕರ್ತವ್ಯದಿಂದ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ರಾಹುಲ್ ಗಾಂಧಿ ಅವರ ಆಪ್ತ ಸಹಾಯಕ ಮತ್ತು ಚಾಲಕರಾದ ರತೀಶ್ ಕುಮಾರ್ ಕೆಆರ್ ಹಾಗೂ ಮುಹಮ್ಮದ್ ರಫಿ ಅವರು ಗೃಹ ಇಲಾಖೆಗೆ ಮರಳಿದ್ದಾರೆ ಎಂದು ವರದಿ ಮಾಡಿದೆ.
ವಯನಾಡ್ ಸಂಸದರಾಗಿದ್ದ ರಾಹುಲ್ ಗಾಂಧಿ, ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಎರಡು ವರ್ಷಗಳ ಶಿಕ್ಷೆಗೆ ಗುರಿಯಾದ ನಂತರ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಸದ್ಯ ಅವರು ಜಾಮೀನಿನ ಮೇಲೆ ಇದ್ದು, ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದ್ದರೂ, ಶಿಕ್ಷೆಗೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ. ಸದ್ಯ ವಿಚಾರಣೆ ಮುಂದೂಡಿಕೆಯಾಗಿದೆ.