ಹೊಸ ದಿಗಂತ ವರದಿ, ಬಾಗಲಕೋಟೆ:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ಮಳೆಯಿಂದ ಹಾನಿಯ ಬಗ್ಗೆ ವಿಡಿಯೋ ವರ್ಚುವಲ್ ಮೂಲಕ ಶನಿವಾರ ನಡೆದ ಪರಿಶೀಲನಾ ಸಭೆಯಲ್ಲಿ ಬಾಗಲಕೋಟೆ ಜಿಲ್ಲೆಯ ಹಾನಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ ಮುಖ್ಯಮಂತ್ರಿಗಳ ವಿಡಿಯೋ ಸಂವಾದದಲ್ಲಿ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಬಗ್ಗೆ ಮಾಹಿತಿ ನೀಡುತ್ತಾ ಜಿಲ್ಲೆಯಲ್ಲಿ ಕಳೆದ 4 ದಿನಗಳಲ್ಲಿ ಸುರಿದ ಮಳೆಯಿಂದಾಗಿ 251 ಮನೆಗಳು ಹಾನಿಗೊಳಗಾಗಿವೆ. ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪೂರದ ಓರ್ವ ವ್ಯಕ್ತಿ ಸಿಡಿಲು ಬಡಿದು ಮೃತಪಟ್ಟಿದ್ದು, ಪೋಸ್ಟ ಮಾರ್ಟಮ್ ವರದಿ ಬಂದಿರುತ್ತದೆ. ತಕ್ಷಣ ಪರಿಹಾರ ವಿತರಿಸುವ ಕಾರ್ಯ ಮಾಡಲಾಗುತ್ತಿದೆ. ಮುಧೋಳ ತಾಲೂಕಿನಲ್ಲಿ ಒಂದು ಜಾನುವಾರು ಹಾನಿಯಾಗಿದ್ದು, 3 ಹೆಕ್ಟೆರ್ನಷ್ಟು ತೋಟಗಾರಿಕೆ ಬೆಳೆ ಹಾನಿಯಾಗಿರುತ್ತದೆ ಎಂದು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅತಿವೃಷ್ಠಿಯಿಂದ ಪ್ರಾಣ ಹಾನಿಯಾದಲ್ಲಿ ದಿನ 24 ಗಂಟೆಯೊಳಗಾಗಿ ಪರಿಹಾರ ಕೊಡುವ ಕಾರ್ಯವಾಗಬೇಕು. ಮನೆಗಳ ಹಾನಿ ಬಗ್ಗೆ ಪರಿಶೀಲನೆ ನಡೆಸಿದ ನಂತರವೇ ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ನಾಮ್ರ್ಸ ಪ್ರಕಾರ ಪರಿಹಾರ ವಿತರಣೆಗೆ ಕ್ರಮಕೈಗೊಳ್ಳಬೇಕು. 10 ದಿನಗಳ ನಂತರ ಮಾನ್ಸೂನ್ ಪ್ರಾರಂಭವಾಗಲಿದ್ದು, ಉಂಟಾಗಬಹುದಾದ ಪ್ರವಾಹದ ಬಗ್ಗೆ ಮುಂಜಾಗ್ರತಾ ಕ್ರಮವಹಿಸಿ ಕ್ರಿಯಾ ಯೋಜನೆ ಸಿದ್ದಪಡಿಸಿಕೊಂಡಿಟ್ಟಕೊಳ್ಳಬೇಕೆಂದು ಸೂಚಿಸಿದರು.
ಮಹಾರಾಷ್ಟ್ರ ರಾಜ್ಯದಲ್ಲಿ ಮಳೆ ಹೆಚ್ಚಾಗುತ್ತಿದ್ದು, ಮಳೆಯ ಪ್ರಮಾಣದ ಬಗ್ಗೆ ಮಾಹಿತಿ, ಜಲಾಶಯಗಳಲ್ಲಿನ ಒಳಹರಿವು ಹಾಗೂ ಹೊರಹರಿವಿನ ಬಗ್ಗೆ ಮಾಹಿತಿ ಪಡೆಯುತ್ತಿರಬೇಕು. ಜಲಾಶಯದ ಕಮಿಟಿ ಮ್ಯಾನೆಜಮೆಂಟ್ ಸ್ಟಡಿ ಮಾಡಬೇಕು. ಮಲಪ್ರಭಾ ನದಿಯ ಪ್ರದೇಶ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಈ ಬಗ್ಗೆ ಜಿಲ್ಲೆಯಲ್ಲಿ ಹೆಚ್ಚಿನ ನಿಗಾವಹಿಸಲು ತಿಳಿಸಿದರು.
ಸಂವಾದ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.