ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕೆಫೆಯೊಂದರಲ್ಲಿ (Bengaluru Cafe) ಶುಕ್ರವಾರ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣವು ದೇಶಾದ್ಯಂತ ಆತಂಕ ಮೂಡಿಸಿದೆ.ದೆಹಲಿಯಲ್ಲೂ ಪೊಲೀಸರು (Delhi Police) ಹೈ ಅಲರ್ಟ್ ಆಗಿದ್ದಾರೆ.
ದೆಹಲಿಯಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಜನನಿಬಿಡ ಪ್ರದೇಶಗಳಲ್ಲಿ, ವಿಶೇಷವಾಗಿ ದೆಹಲಿಯ ಮಾರುಕಟ್ಟೆಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಲು ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ಮಾರುಕಟ್ಟೆ ಸಂಘಗಳು ಜಾಗರೂಕರಾಗಿರಲು ಮತ್ತು ತಮ್ಮ ಸ್ಥಳೀಯ ಪೊಲೀಸ್ ಠಾಣೆಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಆವರಣದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುವಂತೆ ಸಂಘ ಸಂಸ್ಥೆಗಳಿಗೆ ಸೂಚಿಸಲಾಗಿದೆ. ದೆಹಲಿ ಪೊಲೀಸರು ತನ್ನ ಬಾಂಬ್ ನಿಷ್ಕ್ರಿಯ ದಳ ಮತ್ತು ಬಾಂಬ್ ಪತ್ತೆ ತಂಡವನ್ನು ಎಚ್ಚರದಿಂದ ಇರುವಂತೆ ತಿಳಿಸಿದ್ದಾರೆ ಎಂದು ಮತ್ತೊಬ್ಬ ಅಧಿಕಾರಿ ಮಾಹಿತಿ ನೀಡಿದ್ದಾರೆ.