January20, 2026
Tuesday, January 20, 2026
spot_img

ಬಾಂಗ್ಲಾದೇಶ ಮತ್ತೆ ಉದ್ವಿಗ್ನ | ಭುಗಿಲೆದ್ದ ಹಿಂಸಾಚಾರ: ಮಾಧ್ಯಮ ಕಚೇರಿಗಳನ್ನು ಗುರಿಯಾಗಿಸಿಕೊಂಡು ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಗ್ಲಾದೇಶದಲ್ಲಿ ರಾಜಕೀಯ ವಾತಾವರಣ ಮತ್ತೆ ತೀವ್ರ ಅಶಾಂತಿಯತ್ತ ಸಾಗುತ್ತಿದೆ. ವಿದ್ಯಾರ್ಥಿ ನಾಯಕ ಹಾಗೂ ಚುನಾವಣಾ ಅಭ್ಯರ್ಥಿ ಶರೀಫ್ ಉಸ್ಮಾನ್ ಹಾದಿ ನಿಧನದ ಸುದ್ದಿ ಹೊರಬಂದ ಬೆನ್ನಲ್ಲೇ ರಾಜಧಾನಿ ಢಾಕಾ ಸೇರಿದಂತೆ ಹಲವು ನಗರಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದಿವೆ. ಬೀದಿಗಿಳಿದ ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿ, ಕಟ್ಟಡಗಳ ಮೇಲೆ ದಾಳಿ ನಡೆಸಿದ್ದು, ದೇಶದ ಕಾನೂನು ಮತ್ತು ಸುವ್ಯವಸ್ಥೆ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದೆ.

ಶರೀಫ್ ಉಸ್ಮಾನ್ ಹಾದಿ ಫೆಬ್ರವರಿ 12ರ ಸಾರ್ವತ್ರಿಕ ಚುನಾವಣೆಗೆ ಪ್ರಚಾರ ನಡೆಸುತ್ತಿದ್ದ ವೇಳೆ ಡಿಸೆಂಬರ್ 12ರಂದು ಢಾಕಾದಲ್ಲಿ ಮುಸುಕುಧಾರಿ ದುಷ್ಕರ್ಮಿಗಳಿಂದ ಗುಂಡೇಟಿಗೆ ಒಳಗಾಗಿದ್ದರು. ಗಂಭೀರವಾಗಿ ಗಾಯಗೊಂಡ ಅವರನ್ನು ಮೊದಲು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ, ಬಳಿಕ ಸಿಂಗಾಪುರಕ್ಕೆ ಕರೆದೊಯ್ಯಲಾಗಿತ್ತು. ಆರು ದಿನಗಳ ಕಾಲ ಜೀವ ರಕ್ಷಕ ವ್ಯವಸ್ಥೆಯಲ್ಲಿ ಚಿಕಿತ್ಸೆ ಪಡೆದ ಅವರು ಕೊನೆಗೂ ಮೃತಪಟ್ಟಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಢಾಕಾದ ಧನ್ಮೊಂಡಿ–32 ಸೇರಿದಂತೆ ಹಲವು ಪ್ರದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಪ್ರಮುಖ ಪತ್ರಿಕೆಗಳ ಕಚೇರಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಗಳಲ್ಲಿ ಮಾಧ್ಯಮ ಸಿಬ್ಬಂದಿ ಕಟ್ಟಡದ ಒಳಗೆ ಸಿಲುಕಿಕೊಂಡಿದ್ದಾರೆ. ಪ್ರತಿಭಟನಾಕಾರರು ಕೆಲ ಮಾಧ್ಯಮ ಸಂಸ್ಥೆಗಳು ಭಾರತದೊಂದಿಗೆ ನಂಟು ಹೊಂದಿವೆ ಎಂದು ಆರೋಪಿಸಿದ್ದಾರೆ.

ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ ನಡೆದ ಈ ಬೆಳವಣಿಗೆ ದೇಶದ ರಾಜಕೀಯ ಭವಿಷ್ಯ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಮಧ್ಯಂತರ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಬಾಂಗ್ಲಾದೇಶ ಮತ್ತೊಮ್ಮೆ ಅನಿಶ್ಚಿತತೆಯ ಹಂತಕ್ಕೆ ಪ್ರವೇಶಿಸಿರುವುದು ಸ್ಪಷ್ಟವಾಗಿದೆ.

Must Read