ಹೊಸ ದಿಗಂತ ಡಿಜಿಟಲ್ ಡೆಸ್ಕ್:
ತನ್ನ ತಂದೆ ವಿಧಿವಶರಾದ ಹಿನ್ನೆಲೆಯಲ್ಲಿ ಅವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಭೂಗತ ಪಾತಕಿ ಬನ್ನಂಜೆ ರಾಜಾ ಉಡುಪಿ ಜಿಲ್ಲೆಯ ಮಲ್ಪೆಯಲ್ಲಿರುವ ತನ್ನ ಮನೆಗೆ ಆಗಮಿಸಿದ್ದು, ಮಲ್ಪೆ ಹಿಂದೂ ರುದ್ರ ಭೂಮಿಯಲ್ಲಿ ರಾಜಾ ತನ್ನ ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದ್ದಾನೆ. ಈ ಸಂದರ್ಭ ಕುಟುಂಬ ಸದಸ್ಯರು ನೂರಾರು ಆಪ್ತರು, ಗ್ರಾಮಸ್ಥರು ಭಾಗಿಯಾಗಿದ್ದರು.
ರಾಜಾ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಉದ್ಯಮಿ ಆರ್.ಎನ್. ನಾಯಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ಹಿಂಡಲಗಾಲ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಈ ನಡುವೆ ತಂದೆಯ ನಿಧನದ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಬೇಕೆಂದು ಆತ ಹೈಕೋರ್ಟ್ಗೆ ಪೆರೋಲ್ ಅರ್ಜಿ ಸಲ್ಲಿಸಿದ್ದ. ಕೋರ್ಟ್ ಪೆರೋಲ್ ಪಡೆದು ಬಿಗಿ ಪೊಲೀಸ್ ಭದ್ರತೆಯಲ್ಲಿ ಆತನನ್ನು ಉಡುಪಿಗೆ ಕರೆತರಲಾಗಿದೆ. ಪೆರೋಲ್ ಅವಧಿಯಲ್ಲಿ ಮೊಬೈಲ್ ಫೋನ್, ಇಂಟರ್ನೆಟ್ ಬಳಕೆ ನಿಷೇಧ ಸೇರಿದಂತೆ ಹಲವು ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಲಾಗಿದೆ.