88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಸಿದ್ಧ ಲೇಖಕಿ ಮತ್ತು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರ ನೇತೃತ್ವದಲ್ಲಿ ಬಳ್ಳಾರಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.

ಸಭೆಯಲ್ಲಿ ಹಾಜರಿದ್ದ ಎಲ್ಲಾ ಪದಾಧಿಕಾರಿಗಳು ಸರ್ವಸಮ್ಮತದಿಂದ ಬಾನು ಮುಷ್ತಾಕ್ ಅವರ ಹೆಸರು ಮುಂದಿಟ್ಟರು. ಇದು ಬಾನು ಅವರಿಗೆ ಮತ್ತೊಂದು ಪ್ರಮುಖ ಗೌರವವಾಗಿದೆ.

ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಎಂಬ ಕಥಾಸಂಕಲನ ಇತ್ತೀಚೆಗೆ ಇಂಗ್ಲಿಷ್ ಭಾಷೆಗೆ ‘ಹಾರ್ಟ್ ಲ್ಯಾಂಪ್’ (Heart Lamp) ಎಂಬ ಶೀರ್ಷಿಕೆಯಲ್ಲಿ ಅನುವಾದವಾಗಿದ್ದು, ಈ ಕೃತಿಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿತ್ತು. ಇದೇ ಮೊದಲ ಬಾರಿಗೆ ಕನ್ನಡದ ಕೃತಿಯೊಂದು ಈ ಗೌರವ ಪಡೆದಿರುವುದು ಗಮನಾರ್ಹ ಸಂಗತಿಯಾಗಿದೆ.

ಕೇವಲ ಬೂಕರ್ ಪ್ರಶಸ್ತಿಯಷ್ಟೇ ಅಲ್ಲದೆ, ಈ ಅನುವಾದಿತ ಕೃತಿಗೆ ‘ಪೆನ್ ಟ್ರಾನ್ಸ್‌ಲೇಟ್ಸ್’ ಪ್ರಶಸ್ತಿಯೂ ಸಿಕ್ಕಿದೆ. ಈ ಕತೆಗಳಲ್ಲಿ ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಮಹಿಳೆಯರ ದೈನಂದಿನ ಬದುಕು, ಸಂಘರ್ಷಗಳು ಹಾಗೂ ಆಂತರಿಕ ಅನುಭವಗಳು ಸೂಕ್ಷ್ಮವಾಗಿ ಚಿತ್ರಿಸಲ್ಪಟ್ಟಿವೆ.

1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದರು. ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕನ್ನು ಆಧಾರಿಸಿ ಈ ಕತೆಯನ್ನು ಬರೆಯಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!