ಹೊಸ ದಿಗಂತ ವರದಿ, ಹುಬ್ಬಳ್ಳಿ:
ಮುಂಬರುವ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಟಿಕೆಟ್ ನೀಡುವ ಕುರಿತು ಪಕ್ಷದ ಯಾವ ನಾಯಕರಲ್ಲೂ ಅಪಸ್ವರವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಹೇಳಿದರು.
ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ, ರಾಜ್ಯ ಮತ್ತು ಈ ಭಾಗದ ನಾಯಕರು ಸೇರಿ ಹೊರಟ್ಟಿ ಅವರನ್ನು ಆಯ್ಕೆ ಮಾಡಿದ್ದಾರೆ ಎಂದರು.
ರಾಷ್ಟ್ರೀಯ ಪಕ್ಷವಾಗಿದ್ದರಿಂದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ನಮ್ಮದು ದೊಡ್ಡ ಹಾಗೂ ಶಿಸ್ತಿನ ಪಕ್ಷ, ಮುಖಂಡರಲ್ಲಿ, ಕಾರ್ಯಕರ್ತರಲ್ಲಿ ಚುನಾವಣೆಗೆ ನಿಲ್ಲುವ ಆಸಕ್ತಿ ಸಹಜವಾಗಿ ಇರುತ್ತದೆ. ಎಲ್ಲ ಆಕಾಂಕ್ಷಿಗಳಿಗೂ ಟಿಕೆಟ್ ನೀಡಲು ಸಾಧ್ಯವಿಲ್ಲ ಅದು ಒಬ್ಬರಿಗೆ ಮಾತ್ರ ಸಿಗುತ್ತದೆ. ಆದರೆ ಪಕ್ಷ ವರಿಷ್ಠರು ಯಾರಿಗೆ ಟಿಕೆಟ್ ನೀಡುತ್ತಾರೋ ಅದೇ ಅಂತಿಮ. ಅದಕ್ಕೆ ಯಾರು ವಿರೋಧ ಮಾಡಲ್ಲ. ಎಲ್ಲರೂ ಸೇರಿ ಆ ಅಭ್ಯರ್ಥಿ ಪರವಾಗಿ ಚುನಾವಣೆಯ ಪ್ರಚಾರದಲ್ಲಿ ತೊಡಗುತ್ತೇವೆ ಎಂದು ತಿಳಿಸಿದರು.
ರಾಜ್ಯಸಭಾ ಸದಸ್ಯರ ಆಯ್ಕೆ ಕುರಿತು ವರಿಷ್ಠರು ಬಸವರಾಜ ಬೊಮ್ಮಾಯಿ ಅವರನ್ನು ದೆಹಲಿ ಕರೆಸಿಕೊಂಡಿದ್ದರು. ಇದು ಸಹಜ. ಸಚಿವ ಸಂಪುಟ ಬದಲಾವಣೆ ಬಗ್ಗೆ ಯಾರೂ ಹೇಳಿಕೆ ನೀಡಿಲ್ಲ. ಖಾಲಿ ಇರುವ ಸಚಿವ ಸ್ಥಾನ ಭರ್ತಿ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆದಿದೆ ಎಂದರು.