ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿಯಲ್ಲಿ ಐತಿಹಾಸಿಕ ‘ಬೆಂಗಳೂರು ಕಡಲೆಕಾಯಿ ಪರಿಷೆ’ ಆರಂಭವಾಗಲಿದ್ದು, ಬಸವನಗುಡಿಯಲ್ಲಿ ಗತಕಾಲದ ವೈಭವ ಮತ್ತೆ ಮರುಕಳಿಸಲಿದೆ. ಇಂದು ಸಂಜೆ 6 ಗಂಟೆಗೆ ಪರಿಷೆಯ ಸಂಭ್ರಮ ಆರಂಭವಾಗಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ತುಲಾಭಾರ ಕಾರ್ಯಕ್ರಮದ ಮೂಲಕ ಚಾಲನೆ ನೀಡಲಿದ್ದಾರೆ.
ಇಲ್ಲಿ ಮುಂದಿನ ಐದು ದಿನಗಳ ಕಾಲ ಸಂಭ್ರಮ ಮೇಳೈಸಲಿದೆ. ಪರಿಷೆಗೆ ಆಗಮಿಸುವವರಿಗಾಗಿ ಸೂಕ್ತ ಪೆಂಡಾಲ್ ವ್ಯವಸ್ಥೆ, ಆಸನಗಳ ವ್ಯವಸ್ಥೆ, ಗಣ್ಯ ವ್ಯಕ್ತಿಗಳಿಗೆ, ಸಾರ್ವಜನಿಕರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಪರಿಷೆಯ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಬಿಬಿಎಂಪಿ ವಿಶೇಷ ಆಯುಕ್ತ (ಹಣಕಾಸು) ಜಯರಾಮ್ ರಾಯ್ಪುರ ಪರಿಷೆ ನಡೆಯುವ ಸ್ಥಳಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುರ್ತು ಸಂದರ್ಭದ ನಿರ್ವಹಣೆಗಾಗಿ ತಾತ್ಕಾಲಿಕವಾಗಿ ವೈದ್ಯಕೀಯ, ಅಗ್ನಿಶಾಮಕ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸುಮಾರು ಎರಡು ಸಾವಿರ ತಾತ್ಕಾಲಿಕ ಅಂಗಡಿಗಳನ್ನು ತೆರೆಯಲು ವ್ಯಾಪಾರಸ್ಥರಿಗೆ ಅವಕಾಶ ನೀಡಲಾಗಿದೆ. ಇನ್ನು ಟ್ರಾಫಿಕ್ ಸಮಸ್ಯೆಯಾಗದಂತೆ ಕೂಡಾ ಇಲ್ಲಿ ಅಗತ್ಯ ಕ್ರಮ ವಹಿಸಲಾಗಿದೆ.