ಸಂಪ್ರದಾಯದಂತೆ ಮಡಿಕೇರಿ-ಗೋಣಿಕೊಪ್ಪ ದಸರಾ ಆಚರಣೆಗೆ ಬಿ.ಸಿ.ನಾಗೇಶ್ ಸಲಹೆ

ಹೊಸದಿಗಂತ ವರದಿ, ಮಡಿಕೇರಿ:
ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಜನೋತ್ಸವಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಲಿದ್ದು, ಸಂಪ್ರದಾಯದಂತೆ ದಸರಾ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಸಲಹೆ ನೀಡಿದರು.
ನಗರದ ಜಿ.ಪಂ.ಸಭಾಂಗಣದಲ್ಲಿ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಂಬಂಧಿಸಿದಂತೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.
ಈ ಹಿಂದಿನಂತೆ ದಸರಾವನ್ನು ಆಚರಿಸುವಂತಾಗಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು. ವಿವಿಧ ಉಪ ಸಮಿತಿಗಳು ಸೇರಿದಂತೆ ಕಾಲ ಕಾಲಕ್ಕೆ ಸಭೆ ಆಯೋಜಿಸಿ, ದಸರಾ ಯಶಸ್ಸಿಗೆ ಶ್ರಮಿಸುವಂತೆ ಸಚಿವರು ಸಲಹೆ ಮಾಡಿದರು.
ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಕೆ.ಜಿ.ಬೋಪಯ್ಯ ಮತ್ತು ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಾತನಾಡಿ, ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾಗೆ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆ ಆಗಲಿದ್ದು, ದಸರಾವನ್ನು ಸಂಪ್ರದಾಯದಂತೆ ಆಯೋಜಿಸುವಂತಾಗಬೇಕು ಎಂದರು.
ಕರಗ ಮೆರವಣಿಗೆಯೇ ಪ್ರಮುಖ:
ಸಭೆಯ ಆರಂಭದಲ್ಲಿ ಮಾತನಾಡಿದ ನಗರಸಭೆ ಹಾಗೂ ದಸರಾ ಸಮಿತಿ ಅಧ್ಯಕ್ಷೆ ಅನಿತಾ ಪೂವಯ್ಯ ಅವರು, ಕೊಡಗಿನ ನಾಡಹಬ್ಬವಾದ ಮಡಿಕೇರಿ ದಸರಾ ಉತ್ಸವಕ್ಕೆ ಸುಮಾರು 165 ವರ್ಷಗಳ ಇತಿಹಾಸವಿದ್ದು, ಇತ್ತೀಚಿನ ವರ್ಷಗಳಲ್ಲಿ ದಸರಾ ನಾಡಹಬ್ಬವು ಸರ್ಕಾರದ ಅನುದಾನದೊಂದಿಗೆ ಜನೋತ್ಸವವಾಗಿ ಆಚರಿಸಲಾಗುತ್ತಿದೆ ಎಂದರು.
ಮಡಿಕೇರಿ ದಸರಾ ಉತ್ಸವದಲ್ಲಿ 4 ಶಕ್ತಿ ದೇವತೆಗಳ ಕರಗ ಮೆರವಣಿಗೆ ಪ್ರಮುಖವಾಗಿದ್ದು, ಆ ನಿಟ್ಟಿನಲ್ಲಿ ಸೆ.26 ರಂದು 4 ಶಕ್ತಿ ದೇವತೆಗಳ ಕರಗ ಮೆರವಣಿಯೊಂದಿಗೆ ದಸರಾಗೆ ಚಾಲನೆ ದೊರೆಯಲಿದೆ ಎಂದು ನುಡಿದರು.
ದಸರಾ ಸಮಿತಿ ಕಾರ್ಯಾಧ್ಯಕ್ಷ ಕೆ.ಎಸ್. ರಮೇಶ್ ಅವರು ದಸರಾದ ಅಂದಾಜು ಪಟ್ಟಿಯ ಖರ್ಚು ವೆಚ್ಚಗಳ ಬಗ್ಗೆ ಮಾಹಿತಿ ನೀಡಿದರಲ್ಲದೆ, ದಸರಾ ಸಂದರ್ಭದಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಬೇಕು. ವಿದ್ಯುತ್ ಮಾರ್ಗ ಸರಿಪಡಿಸುವುದು, ಆರೋಗ್ಯ ಇಲಾಖೆಯಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವುದು ಹೀಗೆ ಹಲವು ಕಾರ್ಯಗಳನ್ನು ಕೈಗೊಳ್ಳಬೇಕಿದೆ ಎಂದು ಸಚಿವರ ಗಮನಕ್ಕೆ ತಂದರು.
ಹಾಗೆಯೇ ಗೋಣಿಕೊಪ್ಪ ದಸರಾ ಸಂಬಂಧಿದಂತೆ ಕಾವೇರಿ ದಸರಾ ಸಮಿತಿ ಅಧ್ಯಕ್ಷ ಬಿ.ಎನ್.ಪ್ರಕಾಶ್ ಅವರು ಶೋಭಾಯಾತ್ರೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮಾಹಿತಿ ನೀಡಿದರು.
ಗೋಣಿಕೊಪ್ಪ ದಸರಾ ಸಮಿತಿಯ ಸಿ.ಕೆ.ಬೋಪಣ್ಣ ಅವರು ಹಲವು ವಿಚಾರಗಳ ಕುರಿತು ಗಮನಸೆಳೆದರು.
ಪೊಲೀಸ್ ಬಂದೋಬಸ್ತ್: ಉಪ ಪೊಲೀಸ್ ವರಿಷ್ಠಾಧಿಕಾರಿ ಗಜೇಂದ್ರ ಪ್ರಸಾದ್ ಅವರು ದಸರಾ ಆಚರಣೆಗೆ ಎಲ್ಲಾ ರೀತಿಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುವುದು, ವಿಜಯದಶಮಿಯ ರಾತ್ರಿ ದಶಮಂಟಪಗಳ ಶೋಭಾಯಾತ್ರೆಯನ್ನು ಬೇಗ ಆರಂಭಿಸುವಂತಾಗಬೇಕು ಎಂದು ಮನವಿ ಮಾಡಿದರರಲ್ಲದೆ, ಸುರಕ್ಷತೆ ದೃಷ್ಟಿಯಿಂದ ಅಗ್ನಿಶಾಮಕ ಇಲಾಖೆಯಿಂದ ಪ್ರಮಾಣ ಪತ್ರ ಪಡೆಯುವಂತಾಗಬೇಕು ಎಂದರು.
ಪ್ರವೇಶ ನಿರ್ಬಂಧಿಸಿ:
ಹಿರಿಯರಾದ ಎಂ.ಬಿ.ದೇವಯ್ಯ ಅವರು ಮಾತನಾಡಿ, ದಸರಾ ಸಂದರ್ಭದಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಪ್ರವಾಸಿ ಸ್ಥಳಗಳಿಗೆ 6 ಗಂಟೆಯ ನಂತರ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಕೋರಿದರು. ಮನು ಮಂಜುನಾಥ್ ಅವರು ದಶಮಂಟಪಗಳ ಶೋಭಾಯಾತ್ರೆ ಬಗ್ಗೆ ಮಾಹಿತಿ ನೀಡಿದರು. ಮದ್ಯ ಮಾರಾಟ ನಿಷೇಧ ಮಾಡಬೇಕೆ ಅಥವಾ ಬೇಡವೇ ಎಂಬ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯಿತು.
ಜೀವ ವೈವಿಧ್ಯ ಮಂಡಳಿ ರಾಜ್ಯ ಅಧ್ಯಕ್ಷ ನಾಪಂಡ ರವಿಕಾಳಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಅಪರ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಮತ್ತಿತರರು ಇದ್ದರು.
ಗೊಂದಲವಿಲ್ಲ:
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಮತ್ತು ಶಾಸಕರು ಈ ಹಿಂದಿನಂತೆ ದಸರಾ ನಡೆಯಲಿದೆ. ಧ್ವನಿವರ್ಧಕ ಬಳಕೆ ಮತ್ತಿತರ ಸಂಬಂಧ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!